ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆಗೆ ಸಂಬಂಧ ಅಕ್ಟೋಬರ್ ಮೊದಲ ವಾರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ ಗೆ ತಿಳಿಸಿದೆ.
ಈ ಕುರಿತು ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ವೇಳೆ ಆಯೋಗ ಈ ಮಾಹಿತಿ ನೀಡಿದೆ. ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಲಿಖಿತ ಹೇಳಿಕೆ ಸಲ್ಲಿಸಿದರು.
ಮೀಸಲಾತಿ ಅವಧಿಯನ್ನು 10 ವರ್ಷಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಸುಗ್ರಿವಾಜ್ಞೆ ಪ್ರಕಾರ ಮೀಸಲಾತಿ ಮರು ನಿಗದಿಪಡಿಸಬೇಕಾಗಿದೆ. ಈ ಪ್ರಕ್ರಿಯೆಯನ್ನು ಜುಲೈ 25ರೊಳಗೆ ಪೂರ್ಣಗೊಳಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗುವುದು. ಸೆಪ್ಟೆಂಬರ್ 10ರೊಳಗೆ ಮತದಾರರ ಪಟ್ಟಿ ಅಂತಿಮಗೊಳ್ಳಲಿದೆ ಎಂದು ವಿವರಿಸಿದರು.



