ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 600 ವೈದ್ಯರನ್ನು ಕಾಯಂಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮತಿ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುವ 600 ವೈದ್ಯರು ಕಾಯಂಗೊಳಿಸುವುದರ ಜೊತೆ ವಿವಿಧ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿದ್ದರು. ಅವರ ಬೇಡಿಯನ್ನು ಪರಿಗಣಿಸಿದ ಸರ್ಕಾರ ಮೊದಲು ಈಗಿರುವ 45 ಸಾವಿರ ವೇತನವನ್ನು 60 ಸಾವಿರಕ್ಕೆ ಏರಿಕೆ ಮಾಡಲಾಗಿದೆ. ಇನ್ನು 600 ವೈದ್ಯರನ್ನು ಕಾಯಂಗೊಳಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮ್ಮತಿ ಸೂಚಿಸಿದ್ದು, ಇಂದು ಸಂಜೆ 4 ಗಂಟೆಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವೈದ್ಯ ಸಂಘಟನೆಯೊಂದಿಗೆ ಸಭೆ ಕರೆಯಲಾಗಿದೆ. ಈ ಸಭೆಯ ಬಳಿಕ ಮುಖ್ಯಮಂತ್ರಿಗಳು ಒಂದು ನಿರ್ಧಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದಲ್ಲಿ 2 ಸಾವಿರ ವೈದ್ಯರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಅದರಲ್ಲಿ 600 ವೈದ್ಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಇನ್ನುಳಿದ ವೈದ್ಯರನ್ನು ನೇರ ನೇಮಕಾತಿ ಮೂಲಕ ತುಂಬಿಕೊಳ್ಳಲಾಗುವುದು ಎಂದರು.



