ಡಿವಿಜಿ ಸುದ್ದಿ, ಬೆಂಗಳೂರು: ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿವೆ ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ-ಡಿಎಸ್ಇಆರ್ಟಿಯಲ್ಲಿ ಸೇತುಬಂಧ ಕಾರ್ಯಕ್ರಮದ ರೂಪುರೇಷೆ ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದ ಸಚಿವರು, ಇಲಾಖೆ ಸಿದ್ಧಪಡಿಸಿದ ವಿಡಿಯೋ ತರಗತಿಗಳನ್ನು ವೀಕ್ಷಿಸಿದರು.
ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳು ಸಹ ಪ್ರಾರಂಭವಾಗಲಿವೆ ಎಂದು ತಿಳಿಸಿದರು
ಕೊರೊನಾ ವೈರಸ್ ಹಿನ್ನೆಲೆ 8, 9 ಮತ್ತು 10ನೇ ತರಗತಿ ಮಕ್ಕಳಿಗಾಗಿ ಸೇತುಬಂಧ ಕಾರ್ಯಕ್ರಮಗಳ ವಿಡಿಯೋ ತರಗತಿಗಳನ್ನು ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರ ಮಾಡಲು ಸಿದ್ಧತೆ ನಡೆಯುತ್ತಿದೆ ಎಂದರು.
ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದಿನ ಸಂದರ್ಭಕ್ಕೆ ಪರಿಣಾಮಕಾರಿಯಾಗಿ ಚಾಲನೆ ನೀಡಿದೆ ಎಂದು ಅವರು ಹೇಳಿದರು.
ಒಂದು ತರಗತಿಯಿಂದ ಮತ್ತೊಂದು ತರಗತಿಗೆ ತೇರ್ಗಡೆ ಹೊಂದುವ ಮಕ್ಕಳಿಗೆ ಹಿಂದಿನ ತರಗತಿಗಳ ಕಲಿಕೆಯನ್ನು ನೆನಪಿಸಿ ಮುಂದಿನ ತರಗತಿಗಳಿಗೆ ಸಿದ್ಧಗೊಳಿಸುವ ಸೇತುಬಂಧ’ ಮಕ್ಕಳ ಕಲಿಕೆಯನ್ನು ಸಮಗ್ರವಾಗಿಸುವ ನಿಟ್ಟಿನಲ್ಲಿ ಒಂದು ಪರಿಪೂರ್ಣ ಕಾರ್ಯಕ್ರಮ ಎಂದು ಅವರು ತಿಳಿಸಿದರು.
ಕೆಲವೇ ದಿನಗಳಲ್ಲಿ 8ರಿಂದ 10ನೇ ತರಗತಿಯ ಸೇತುಬಂದ ವಿಡಿಯೊ ತರಗತಿಗಳು ಚಂದನ ವಾಹಿನಿಯಲ್ಲಿ ಆರಂಭಗೊಳ್ಳಲಿವೆ. ಆ ನಂತರ ಇಂಗ್ಲಿಷ್ ಮಾಧ್ಯಮಗಳಲ್ಲೂ ಈ ತರಗತಿಗಳ ಪಾಠಗಳನ್ನು ಪ್ರಾರಂಭಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.



