ಡಿವಿಜಿ ಸುದ್ದಿ, ದಾವಣಗೆರೆ: ಸರ್ಕಾರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ಬಿಮಾ (ವಿಮಾ) ಯೋಜನೆ ಹಾಗೂ ಬೆಳೆ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಇದನ್ನು ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೃಷಿ, ತೋಟಗಾರಿಕೆ, ಲೀಡ್ ಬ್ಯಾಂಕ್ ಅಧಿಕಾರಿಗಳು ಮತ್ತು ಬ್ಯಾಂಕ್ಗಳ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ಬಿಮಾ (ವಿಮಾ) ಯೋಜನೆ ಪ್ರಚಾರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ರೈತರ ಅನುಕೂಲಕ್ಕಾಗಿ ಈ ವಿಮಾ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಕಾರ್ಯಕ್ರಮ ಅನುಷ್ಠಾನಗೊಳಿಸಲು ಎಲ್ಲಾ ಅಧಿಕಾರಿಗಳು ಸಹಕರಿಸಬೇಕು. ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಬೆಳೆ ನಷ್ಟ ಉಂಟಾದಲ್ಲಿ ವಿಮಾ ಸೌಲಭ್ಯ ಪಡೆಯಲು ಈ ಯೋಜನೆಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆವಾರು ಬಿತ್ತನೆಯಲ್ಲಿ ನಿಗದಿತ ಗುರಿ ಸಾಧಿಸಬೇಕು. ಜಿಲ್ಲೆಯಲ್ಲಿ ಬೆಳೆ ನೋಂದಣಿ ಸಮರ್ಪಕವಾಗಿ ಆಗುತ್ತಿಲ್ಲ. ಬೆಳೆಯಲ್ಲಿ ಯಾವುದೇ ವ್ಯತ್ಯಾಸವಾಗಬಾರದು. ಹೊನ್ನಾಳಿ-ಜಗಳೂರು ಭಾಗಗಳಲ್ಲಿ ಕ್ರಾಪ್ ಎಂಟ್ರಿ ಸರಿಯಾಗು ಆಗುತ್ತಿಲ್ಲ. ಇದರಲ್ಲಿ ಲೋಪ ಕಂಡುಬಂದರೆ ಜಿಲ್ಲಾ ಮಟ್ಟದ ಅಧಿಕಾರಿಗಳು ನೇರವಾಗಿ ಹೊಣೆಗಾರರಾಗುತ್ತಾರೆ. ಜೊತೆಗೆ ಬ್ಯಾಂಕ್ಗಳಲ್ಲಿ ಬೆಳೆ ವಿಮೆಗೆ ಸಂಬಂಧಪಟ್ಟಂತೆ ಬಹಳಷ್ಟು ಅಡಚಣೆಗಳಿವೆ ಎಂಬುದರ ಬಗ್ಗೆ ದೂರುಗಳಿವೆ. ಸಾಲ ರಹಿತ ಫಲಾನುಭವಿಗಳು ಬಂದಾಗ ಯಾರನ್ನು ಕೂಡ ವಾಪಾಸ್ಸು ಕಳುಹಿಸಬಾರದು. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.
ಹರಿಹರ, ಮಲೆಬೆನ್ನೂರು ಭಾಗಗಳಲ್ಲಿ ಸ್ವಯಂ ಪ್ರೇರಿತವಾಗಿ ಲಾಕ್ಡೌನ್ ಮಾಡಿಕೊಳ್ಳಲಾಗಿದೆ. ನಾವು ಯಾವುದೇ ಆದೇಶ ಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಆ ಭಾಗದ ತಹಶೀಲ್ದಾರ್ ಗಮನಕ್ಕೆ ತಂದು, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕೃಷಿಗೆ ಸಂಬಂಧಪಟ್ಟಂತಹ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳ ಅಂಗಡಿಗಳು ಸಂಜೆಯವರೆಗೆ ತೆರೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಮಾತನಾಡಿ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆಯಡಿ ಭತ್ತ ಮತ್ತು ಮುಸುಕಿನ ಜೋಳ ಒಳಪಟ್ಟಿದ್ದು, ವಿಮಾ ಕಂತು ಪಾವತಿಸಲು ಜು. 30 ಕೊನೆಯ ದಿನವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೀವ್, ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು, ವಿಮಾ ಕಂಪನಿ ಪ್ರತಿನಿಧಿಗಳು, ಲೀಡ್ ಬ್ಯಾಂಕ್ ಮ್ಯಾನೇಜರ್, ಡಿಸಿಸಿ ಬ್ಯಾಂಕ್ ಪ್ರರತಿನಿಧಿಗಳು, ಸಹಕಾರಿ ಸಂಘಗಳ ಉಪನಿಬಂಧಕರು, ರಸಗೊಬ್ಬರ ಮಾರಾಟಾಧಿಕಾರಿಗಳು, ರಸಗೊಬ್ಬರ ಉತ್ಪಾದನಾ ಕಂಪನಿಯ ಪ್ರತಿನಿಧಿಗಳು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರು, ಎ.ಆರ್.ಎಸ್. ಕತ್ತಲಗೆರೆ ವಿಜ್ಞಾನಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.



