ಡಿವಿಜಿ ಸುದ್ದಿ, ಬೆಂಗಳೂರು: ಫೆಬ್ರುವರಿಯಿಂದ ಜುಲೈ 4 ರವರೆಗೆ ರೈತರಿಗೆ ನೀಡಬೇಕಾಗಿದ್ದ 530 ಕೋಟಿ ಪ್ರೋತ್ಸಾಹಧನ ಸರ್ಕಾರದಿಂದ ಬಿಡುಗಡೆಯಾಗಿದ್ದು, ಕೂಡಲೇ ರೈತರ ಖಾತೆಗಳಿಗೆ ಪ್ರೋತ್ಸಾಹಧನ ಜಮಾ ಆಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದರು.
ಈಗ ಕೆಎಂಎಫ್ ವಿವಿಧ ಹಾಲು ಒಕ್ಕೂಟಗಳಿಂದ ಪ್ರತಿದಿನ 88 ಲಕ್ಷ ಲೀಟರ್ ಹಾಲು ದಾಖಲೆ ಮಟ್ಟದಲ್ಲಿ ಶೇಖರಣೆಯಾಗುತ್ತಿದ್ದು, ಕಳೆದ ವರ್ಷಕ್ಕಿಂತ 6 ಲಕ್ಷ ಲೀಟರ್ ಹಾಲು ಹೆಚ್ಚಾಗಿದೆ. ಕಳೆದ ಮಾರ್ಚ ತಿಂಗಳಿಗೆ ಹೋಲಿಸಿದಾಗ ಪ್ರತಿದಿನ ಸುಮಾರು 20 ಲಕ್ಷ ಲೀಟರ್ ಹಾಲು ಹೆಚ್ಚಾಗಿದೆ ಎಂದು ಹೇಳಿದರು.
ಕೊರೊನಾದಿಂದ ಹಾಲು, ಮೊಸರಿನ ಮಾರಾಟದಲ್ಲಿ ತೀವ್ರ ಕುಸಿತ ಕಂಡಿದ್ದು, ಪ್ರತಿದಿನ 10 ರಿಂದ 12 ಲಕ್ಷ ಲೀಟರ್ ಮಾರಾಟ ಕಡಿಮೆಯಾಗಿದೆ. ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಪ್ರತಿ ತಿಂಗಳು ವಿತರಿಸುತ್ತಿದ್ದ 2,000 ಮೆಟ್ರಿಕ್ ಟನ್ ಹಾಲಿನ ಪುಡಿ ಕೂಡ ಶಾಲೆಗಳು ಮುಚ್ಚಿದ್ದರಿಂದ ಇದುವರೆಗೂ ವಿಲೇವಾರಿ ಆಗುತ್ತಿಲ್ಲ. ಹಾಲಿನ ಶೇಖರಣೆ ಹೆಚ್ಚಳ ಹಾಗೂ ತೀವ್ರ ಮಾರಾಟ ಕುಸಿತದಿಂದ ಪ್ರತಿದಿನ 35 ಲಕ್ಷ ಲೀಟರ್ನಷ್ಟು ಹೆಚ್ಚುವರಿ ಹಾಲನ್ನು ಹಾಲಿನ ಪುಡಿ ಮತ್ತು ಬೆಣ್ಣೆಯನ್ನಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ದಿನಾಲೂ 305 ಮೆಟ್ರಿಕ್ ಟನ್ ಹಾಲಿನ ಪುಡಿ ಮತ್ತು 150 ರಿಂದ 160 ಮೆಟ್ರಿಕ್ ಟನ್ ಬೆಣ್ಣೆ ಉತ್ಪಾದನೆಯಾಗಿ ದಾಸ್ತಾನು ಹೆಚ್ಚುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಆರ್ಥಿಕವಾಗಿ ಕಷ್ಟ ಎದುರಿಸಬೇಕಾಗುತ್ತದೆ ಎಂದರು.



