ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಸೋಂಕಿತರನ್ನು ದೇವರೇ ಕಾಪಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆ ವೈಯಕ್ತಿಕ ಹೇಳಿಕೆಯಲ್ಲ. ಇದು ಸರ್ಕಾರದ ಸ್ಥಿತಿಯನ್ನು ಬಹಿರಂಗಪಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಒಬ್ಬ ಸಚಿವರು ದೇವರ ಮೇಲೆ ಭಾರ ಹಾಕ್ತಾರೆ. ಮತ್ತೊಬ್ಬರು ದೇವರ ಕಥೆ ಹೇಳುತ್ತಾರೆ. ಕರ್ನಾಟಕವನ್ನು ದೇವರೇ ಕಾಪಾಡಬೇಕು ಅಂತಾ ಹೇಳ್ತಾರೆ. ಈ ಹೇಳಿಕೆ ಇಡೀ ರಾಜ್ಯವನ್ನು ತಲ್ಲಣಗೊಳಿಸುತ್ತಿದೆ. ಇದು ಶ್ರೀರಾಮುಲು ಅವರ ವೈಯಕ್ತಿಕ ಹೇಳಿಕೆ ಅಲ್ಲ, ಸರ್ಕಾರದ ನಿರ್ಲಕ್ಷ್ಯ ತೋರಿಸುತ್ತದೆ. ಸರ್ಕಾರ ನಡೆಸಲು ಆಗದಿದ್ದರೆ, ಕೂಡಲೇ ರಾಜೀನಾಮೆ ನೀಡಿ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬರಲಿ ಎಂದು ಆಗ್ರಹಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶ್ರೀ ರಾಮುಲು, ಕೊರೊನಾ ನಿಯಂತ್ರಣ ಯಾರ ಕೈಯಲ್ಲಿದೆ ಹೇಳಿ?, ಭಗವಂತ ಒಬ್ಬನೇ ನಮ್ಮನ್ನು ಕಾಪಾಡಬೇಕು. ಇಲ್ಲವಾದಲ್ಲಿ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಬರಬೇಕು. ಕಾಂಗ್ರೆಸ್ ಪಕ್ಷದ ನಾಯಕರು ಕೆಳಮಟ್ಟದ ರಾಜಕಾರಣ ಬಿಡಬೇಕು. ನಾವೇನಾದರು ತಪ್ಪು ಮಾಡಿದ್ದರೆ ಶಿಕ್ಷೆಗೆ ಸಿದ್ಧವಾಗಿದ್ದೇವೆ. ಸಂದಿಗ್ಧ ಸಮಯದಲ್ಲಿ ಕಾಂಗ್ರೆಸ್ ನಾಯಕರು ಯಾವುದೇ ಮಾತಾಡುವ ವೇಳೆ ಎಲ್ಲವನ್ನೂ ಬಿಗಿಹಿಡಿದು ಮಾತಾಡಬೇಕು ಎಚ್ಚರಿಕೆ ನೀಡಿದ್ಧಾರೆ.



