ಡಿವಿಜಿ ಸದ್ದಿ, ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ತಡೆಯುವಂತೆ ಅಧಿಕಾರಿಗಳಿಗೆ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಸೂಚನೆ ನೀಡಿದರು.
ದಾವಣಗೆರೆ-ಹರಿಹರ ನಗರಾಭಿವೃದ್ದಿಇಂದು ದೂಡಾ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆ ಉದ್ದೇಶಿಸಿ ಮಾತನಾಡಿದ ಅವರು. ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ಬರುವ ದೊಡ್ಡಬೂದಿಹಾಳು, ದೊಡ್ಡಬಾತಿ, ಚಿಕ್ಕಬೂದಿಹಾಳು ಹಾಗೂ ಇತರೇ ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆಗಳು ನಿರ್ಮಾಣವಾಗುತ್ತಿದ್ದು, ಇಂತಹ ಅನಧಿಕೃತ ಬಡಾವಣೆಗಳ ನಿರ್ಮಾಣವನ್ನು ತಡೆಯುವ ಕುರಿತು ಚರ್ಚೆ ನಡೆಸಲಾಯಿತು.
ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಲು ಏಳು ದಿನಗಳ ಕಾಲಾವಕಾಶವನ್ನು ನೀಡುವಂತೆ ಸಭೆಯಲ್ಲಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಹೀಗೆ ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳನ್ನು ನೋಂದಣಿ ಮಾಡಿಕೊಳ್ಳಬಾರದೆಂದು ಹಾಗೂ ಖಾತೆಗಳನ್ನು ನೋಂದಣಿ ಮಾಡಿಕೊಳ್ಳದಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.
ಸಭೆಯಲ್ಲಿ ದೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಹರಿಹರ ನಗರಸಭೆ ಪೌರಾಯುಕ್ತೆ ಲಕ್ಷ್ಮೀದೇವಿ, ಪಾಲಿಕೆ ಉಪ ಆಯುಕ್ತ ಪ್ರಭು, ಕಂದಾಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.



