ಡಿವಿಜಿ ಸುದ್ದಿ, ದಾವಣಗೆರೆ: ಸರ್ಕಾರ ಕೊರೊನಾ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಕೆ.ಎಚ್ . ಮುನಿಯಪ್ಪ ಆಗ್ರಹಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸ್ಫೀಕ್ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಸಮಯದಲ್ಲಿ4 ಸಾವಿರ ಕೋಟಿಯಷ್ಟು ಹಣ ದುರುಪಯೋಗ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸರ್ಕಾರ ನ್ಯಾಯಾಂಗ ತನಿಖೆ ಮಾಡಬೇಕು. ಇಲ್ಲದಿದ್ದರೆ, ಕಾಂಗ್ರೆಸ್ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ ಎಂದರು.
ರಾಹುಲ್ ಗಾಂಧಿ ಅವರು ಫೆ. 12 ರಂದೇ ಅಂತರಾಷ್ಟ್ರೀಯ ವಿಮಾನಯಾನ ನಿಷೇಧ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದನ್ನು ಕೇಂದ್ರ ಸರ್ಕಾರ ಹಗುರವಾಗಿ ತಗೆದುಕೊಂಡಿತು. ಇದರ ಪರಿಣಾಮ ದೇಶದಾದ್ಯಂತ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಯಡಿಯೂರಪ್ಪ ಅವರನ್ನೇ ಕೊರೊನಾ ಬಿಟ್ಟಿಲ್ಲ. ಇನ್ನು ಸಾಮಾನ್ಯ ಜನರ ಗತಿ ಏನು ಎಂದು ಪ್ರಶ್ನಿಸಿದರು.
ಸರ್ಕಾರದ ಭ್ರಷ್ಟಾಚಾರ ಪ್ರಶ್ನಿಸಿದಕ್ಕೆ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ನೀಡಿರುವುದು ದುರಂತ. ವಿಪಕ್ಷಗಳು ಆಡಳಿತದಲ್ಲಿನ ಭ್ರಷ್ಟಾಚಾರ ಬಗ್ಗೆ ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ. ಅದರಂತೆ ನಾವು ನಡೆದುಕೊಂಡಿದ್ದೇವೆ. ಆದರೆ, ಇದಕ್ಕೆ ನೋಟಿಸ್ ನೀಡಿದ್ದು, ನಿಜಕ್ಕೂ ದುರಂತ ಎಂದರು.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕೊರೊನಾ ಸಂಕಷ್ಟ ಸಮಯದಲ್ಲಿ ಭ್ರಷ್ಟಾಚಾರ ನಡೆಸಿರುವುದು ಬಿಜೆಪಿಯ ಸಂಸ್ಕಾರ. 4 ಸಾವಿರ ಕೋಟಿ ರೂಪಾಯಿ ಕೊರೊನಾ ಕಿಟ್ ಖರೀದಿಯಲ್ಲಿ ಸುಮಾರು 2 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂದಬುದು ನಮ್ಮ ಆರೋಪ. ಈ ಬಗ್ಗೆ ವಿಶೇಷ ಅಧಿವೇಶನ, ಇಲ್ಲವೇ ಶ್ವೇತ ಪತ್ರ ಹೊರಡಿಸಲು ಸರ್ಕಾರ ಸಿದ್ಧವಿಲ್ಲ. ಆದರೆ, ಸುಗ್ರೀವಾಜ್ಞೆಯ ಮೂಲಕ ತಮಗೆ ಬೇಕಾದ ಆದೇಶ ಮಾಡುತ್ತಿದೆ ಎಂದರು.
ಈ ವೇಳೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಎಂಎಲ್ಸಿ ಅಬ್ದುಲ್ ಜಬ್ಬಾರ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಬಿ. ಮಂಜಪ್ಪ, ಶಾಸಕ ಎಸ್ . ರಾಮಪ್ಪ, ಮಾಜಿ ಶಾಸಕ ಶಾಂತನಗೌಡ ಸೇರಿದಂತೆ ಮತ್ತಿತರರರು ಉಪಸ್ಥತಿರಿದ್ದರು.



