ಹೈದರಾಬಾದ್: ಜಮೀನಿನ ವಿವಾದಕ್ಕೆ ವ್ಯಕ್ತಿಯೊಬ್ಬನಿಂದ ಬರೋಬ್ಬರಿ 1.10 ಕೋಟಿ ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಕೀಸರದ ತಹಶೀಲ್ದಾರ್ ಎರ್ವಾ ಬಲರಾಜು ನಾಗರಾಜು ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಎಎಸ್ ರಾವ್ ನಗರದ ತಹಶೀಲ್ದಾರ್ ನಿವಾಸದಲ್ಲಿ ದಾಳಿ ಮಾಡಲಾಗಿದೆ. ಆಗ ಬರೋಬ್ಬರಿ 1.10 ಕೋಟಿ ನಗದು ಹಣ ಪತ್ತೆಯಾಗಿದೆ. ಹೆಚ್ಚಾಗಿ 500 ರೂ. ಮುಖಬೆಲೆಯ ನೋಟುಗಳನ್ನು ಲಂಚವಾಗಿ ಸ್ವೀಕರಿಸಿದ್ದು, ಶುಕ್ರವಾರ ರಾತ್ರಿ ನೋಟುಗಳ ಎಣಿಕೆ ಶುರುವಾಗಿದ್ದು, ಇಂದು ಬೆಳಗ್ಗೆ ತನಕ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಇತ್ತು. ಇದನ್ನು ಅಧಿಕೃತ ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರವಾಗಿ ಕೆಲಸ ಮಾಡಿದ್ದಕ್ಕಾಗಿ ಈ ಹಣವನ್ನು ತಹಶೀಲ್ದಾರ್ ಲಂಚವಾಗಿ ಪಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿ ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಹಶೀಲ್ದಾರ್ ಕಚೇರಿ ಆವರಣದಲ್ಲಿಯೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕಂದಾಯ ಅಧಿಕಾರಿ ಬಿ.ಸೈರಾಜ್ರನ್ನು ಸಹ ವಶಕ್ಕೆ ಪಡೆಯಲಾಗಿದೆ.



