ಡಿವಿಜಿ ಸುದ್ದಿ, ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀವುದ್ದಿನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತ ಅಲ್ ಹಿಂದ್ ಸಂಘಟನೆ ಜೊತೆ ನಂಟು ಹೊಂದಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.
ಡಿಜೆಹಳ್ಳಿ, ಕೆಜಿ ಹಳ್ಳಿ ಆ. 11 ರಾತ್ರಿ ಗಲಭೆ ಸೃಷ್ಟಿಸುವಲ್ಲಿ ಸಮೀವುದ್ದೀನ್ ಪ್ರಮುಖನಾಗಿದ್ದ. ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿ ಸಮೀವುದ್ದೀನ್ ಸೆರೆಹಿಡಿದಿದ್ದಾರೆ. ಈ ಹಿಂದೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬಿಜೆಪಿ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳ ಜೊತೆಯಲ್ಲೂ ಸಮೀವುದ್ದೀನ್ ಒಡನಾಟ ಹೊಂದಿದ್ದ, ಅಲ್ ಹಿಂದ್ 8 ಉಗ್ ಸಂಘಟನೆ ಜೊತೆ ಸಂಪರ್ಕದಲ್ಲಿದ್ದ ಎಂಬುದು ಸಿಸಿಬಿ ತನಿಖೆಯಿಂದ ಗೊತ್ತಾಗಿದೆ.

ಭಾನುವಾರ ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು. ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳು ಹಾಗೂ ಅಲ್ ಹಿಂದ್ ಸಂಘಟನೆ ಜೊತೆ ಸಮೀವುದ್ದೀನ್ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಬೇಕಿದೆ ಎಂದು ತಿಳಿಸಿದ್ದಾರೆ.



