ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಲಾಕ್ಡೌನ್ ಸಡಿಲಗೊಂಡಿರುವುದರಿಂದ ನೆರೆಯ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್ಆರ್ಟಿಸಿ ಸಿದ್ಧವಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.
ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಡಿಸಿಎಂ, ನೆರೆಯ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜ್ಯಗಳು ಒಪ್ಪಿಗೆ ಸೂಚಿಸಿದರೆ ಬಸ್ ಸಂಚಾರ ಆರಂಭಿಸಲಾಗುವುದು. ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಮತ್ತೆ ಬಸ್ ಸಂಚಾರ ಪ್ರಾರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸಜ್ಜಾಗಿವೆ. ಆದರೆ, ನೆರೆಯ ರಾಜ್ಯದಿಂದ ಒಪ್ಪಿಗೆ ಸಿಗಬೇಕಿದೆ ಎಂದರು.

ಈಗಾಗಲೇ ಆಂಧ್ರ ಪ್ರದೇಶಕ್ಕೆ ಕರ್ನಾಟಕದಿಂದ ಸರ್ಕಾರಿ ಸಾರಿಗೆ ಬಸ್ಗಳ ಸಂಚಾರವನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪ್ರಾರಂಭಿಸಲು ಪರಿಶೀಲಿಸುವಂತೆ ಸಾರಿಗೆ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಅಲ್ಲದೆ ಆಯಾ ಸಾರಿಗೆ ಸಂಸ್ಥೆಗಳಲ್ಲಿ ಅಗತ್ಯ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ನೆರೆಯ ರಾಜ್ಯಗಳಿಂದ ಸಕಾರಾತ್ಮಕ ಸ್ಪಂದನೆ ದೊರೆಯುವ ನಿರೀಕ್ಷೆ ಇದೆ. ಲಾಕ್ಡೌನ್ಗಿಂತ ಮುಂಚೆ ರಾಜ್ಯದಿಂದ ಒಟ್ಟು 2,500 ಸರ್ಕಾರಿ ಬಸ್ಗಳು ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದವು. ಇದೀಗ ಹಿಂದಿನಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.



