ಡಿವಿಜಿ ಸುದ್ದಿ, ಶಿವಮೊಗ್ಗ: ಕಾಂಗ್ರೆಸ್ ಪಕ್ಷ ಒಡೆದ ಕನ್ನಡಿಯಾಗಿ ಚೂರು ಚೂರಾಗಿದೆ. ಅದನ್ನು ಒಟ್ಟಾಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಈ ಹಿಂದೆ ಕಾಂಗ್ರೆಸ್ ಎಂದರೆ, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಆಜಾದ್, ವೀರ ಸಾವರ್ಕರ್ ಹೆಸರು ನೆನಪಿಗೆ ಬರುತ್ತಿದ್ದರು. . ಆದರೆ, ಈಗ ಕಾಂಗ್ರೆಸ್ ಎಂದ ತಕ್ಷಣ ನೆನಪಿಗೆ ಬರುವುದು ಎರಡೇ ಹೆಸರು ಒಂದು ಸೋನಿಯಾ ಗಾಂಧಿ ಮತ್ತೊಂದು ರಾಹುಲ್ ಗಾಂಧಿ ಎಂದು ವ್ಯಂಗ್ಯವಾಡಿದರು.
ರಾಜಕೀಯ ಪಕ್ಷಕ್ಕೆ ತತ್ವ, ಸಿದ್ಧಾಂತ ಅತಿ ಮುಖ್ಯ. ಆದರೆ ಕಾಂಗ್ರೆಸ್ ನಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ನಾಯಕತ್ವ ಬೇಡ ಎಂದು 23 ಮಂದಿ ಪತ್ರ ಬರೆದಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿಯವರ ನಾಯಕತ್ವ ಬೇಕು ಎನ್ನುವಂತಹ ಕಾಲದಲ್ಲಿ ಕಾಂಗ್ರೆಸ್ಗೆ ಇಂತಹ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.
ಕಾಂಗ್ರೆಸ್ ಮುಳುಗುವ ಹಡಗು. ಸ್ವತಂತ್ರ್ಯ ಬಂದಾಕ್ಷಣ ಕಾಂಗ್ರೆಸ್ ಅನ್ನು ವಿಸರ್ಜಿಸಿ ಎಂದು ಮಹಾತ್ಮ ಗಾಂಧಿಜೀಯವರು ಹೇಳಿದ್ದರು. ಆದರೆ ಅಧಿಕಾರಕ್ಕಾಗಿ ವಿಸರ್ಜನೆ ಮಾಡಲು ಮುಂದಾಗಲಿಲ್ಲ. ಆದರೆ ಇದೀಗ ಅದೇ ಕಾಂಗ್ರೆಸ್ ನಾಯಕತ್ವ ಮತ್ತು ಅಧ್ಯಕ್ಷಗಾಧಿ ವಿಚಾರವಾಗಿ ಅಸಮಾಧಾನ ಉಂಟಾಗಿದೆ ಎಂದರು.
ಸಿದ್ದರಾಮಯ್ಯ, ರಾಹುಲ್ ಗಾಂಧಿ ನಾಯಕತ್ವ ಇರಲಿ ಎಂದರೆ, ಡಿಕೆಶಿ ಸೋನಿಯಾ ಗಾಂಧಿ ನಾಯಕತ್ವ ಇರಲಿ ಎನ್ನುತ್ತಿದ್ದಾರೆ. ಇದರ ನಡುವೆ ವೀರಪ್ಪ ಮೊಯ್ಲಿ ಅವರು ಇವರಿಬ್ಬರ ನಾಯಕತ್ವ ಬೇಡ ಎನ್ನುತ್ತಿದ್ದಾರೆ ಎಂದರು.



