ನವದೆಹಲಿ: ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕೆಂದುಕೊಂಡಿದ್ದೇನೆ. ಇದಕ್ಕೆ ವರಿಷ್ಠರ ಅನುಮತಿ ಸಿಕ್ಕಿದ ತಕ್ಷಣವೇ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮಾಧ್ಯಮಗಳೊಂದಿಗೆ ಇಂದು ಬೆಳಿಗ್ಗೆ ಮಾತನಾಡಿದ ಅವರು. ಸಂಪುಟ ವಿಸ್ತರಣೆ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆಗೆ ಶುಕ್ರವಾರ ಸಮಾಲೋಚನೆ ನಡೆಸಿದ್ದೇನೆ. ಅವರು ಪ್ರಧಾನಿ ಜೊತೆ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ನಿರೀಕ್ಷೆ ಇದೆ ಎಂದರು.
ಪ್ರಧಾನಿ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಿದ್ದೇನೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಕೆಲವು ದಿನದಲ್ಲಿ ಗ್ರೀನ್ ಸಿಗ್ನಲ್ ಸಿಗುವ ವಿಶ್ವಾಸವಿದೆ ಎಂದರು.
ರಾಜ್ಯದ ವಿವಿಧ ಯೋಜನೆಗಳಿಗೆ ಅನುದಾನ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ. ಎಲ್ಲರೂ ಉತ್ತಮವಾಗಿ ಸ್ಪಂದಿಸಿದ್ದು, ಈ ಬಾರಿಯ ದೆಹಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದರು.



