ಡಿವಿಜಿ ಸುದ್ದಿ, ಬೆಂಗಳೂರು: ಕೃಷಿಗೆ ಸಂಬಂಧಿಸಿದ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳು ನಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ಸರ್ಕಾರ ಯಾವುದೇ ರೀತಿಯಲ್ಲೂ ಬೆಂಬಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿ ನಿರಂತರ ಕೆಲಸ ಮಾಡುತ್ತಿದೆ. ರೈತರ ಒಳಿತಿಗಾಗಿಯೇ ಕೆಲವು ಕಾಯ್ದೆಗಳಿಗೆ ತಿದ್ದುಪಡಿ ತರುತ್ತಿದೆ. ಈ ವಿಷಯವನ್ನು ರೈತ ಸಂಘಟನೆಗಳ ಮುಖಂಡರಿಗೂ ಮನವರಿಕೆ ಮಾಡಲಾಗಿದೆ. ಆದರೂ, ರೈತ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಹೀಗಾಗಿ ಈ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದರು.
ರೈತರು ತಮ್ಮ ಉತ್ಪನ್ನಗಳಿಗೆ ಒಳ್ಳೆಯ ಬೆಲೆ ಪಡೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ಎಲ್ಲ ವಿಚಾರಗಳನ್ನೂ ರೈತ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮನವರಿಕೆ ಮಾಡಲಾಗಿದೆ ಎಂದು ಹೇಳಿದರು.
ಕಂದಾಯ ಸಚಿವ ಆರ್. ಅಶೋಕ ಮಾತನಾಡಿ, ನಾಳೆಯ ಬಂದ್ ಕರೆಯನ್ನು ಸರ್ಕಾರ ಬೆಂಬಲಿಸುವುದಿಲ್ಲ. ಬಂದ್ ವಿಚಾರದಲ್ಲಿ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ಗಳು ನೀಡಿರುವ ನಿರ್ದೇಶನಗಳನ್ನು ನಾವು ಪಾಲಿಸುತ್ತೇವೆ ಎಂದರು.
ಸೋಮವಾರ ಎಂದಿನಂತೆ ಎಲ್ಲ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು, ಅಂಗಡಿ ಮುಂಗಟ್ಟುಗಳು ತೆರೆದಿರಲಿವೆ. ಸಾರ್ವಜನಿಕ ಸಾರಿಗೆಯಲ್ಲೂ ವ್ಯತ್ಯಯ ಇಲ್ಲ. ಜನಜೀವನ ಎಂದಿನಂತೆಯೇ ಇರಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಯಾರಾದರೂ ಬಲವಂತದ ಬಂದ್ಗೆ ಯತ್ನಿಸಿದರೆ ಅಂತಹವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಾಗುವುದು.



