ಡಿವಿಜಿ ಸುದ್ದಿ, ಚಾಮರಾಜನಗರ: ಶಾಲೆ ಆರಂಭದ ಕುರಿತು ಪೋಷಕರಲ್ಲಿ ಗೊಂದಲ ಉಂಟಾಗಿದ್ದು, ಈ ಕುರಿತು ಒಂದು ವಾರದಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಆರಂಭದ ಕುರಿತು ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಕುರಿತು ಹಲವು ಬಾರಿ ಸ್ಪಷ್ಟನೆ ನೀಡಿದ್ದೇನೆ. ಸದ್ಯಕ್ಕೆ ಶಾಲೆ ತೆರೆಯುವುದಿಲ್ಲ. ಅಕ್ಟೋಬರ್ 15ರಿಂದ ಕೇಂದ್ರ ಸರ್ಕಾರ ಹಂತ ಹಂತವಾಗಿ ಶಾಲೆ ಪ್ರಾರಂಭಿಸಬಹುದೆಂದು ಅವಕಾಶ ನೀಡಿದೆ. ಆದರೆ ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದರು.
ಶಿಕ್ಷಣ ತಜ್ಞರು, ಶಿಕ್ಷಣ ಸಂಘಟನೆಗಳು, ಜನ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸುವ ನಿರ್ಧಾರ ಮಾಡಿದ್ದೇವೆ. ಯಾವಾಗ ಶಾಲೆ ಆರಂಭಿಸಬೇಕು ಎಂಬ ಬಗ್ಗೆ ಒಂದು ವಾರದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.