ಡಿವಿಜಿ ಸುದ್ದಿ, ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬೀಳಿಸಲು ‘ಮೀರ್ ಸಾಧಿಕ್’ ರೀತಿ ಕೆಲಸ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರ ಬೀಳಿಸಿದ್ದು ಅಷ್ಟೇ ಅಲ್ಲದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಎಚ್.ಡಿ.ಕುಮಾರಸ್ವಾಮಿಗೆ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು. ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ವಿರುದ್ಧ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೇರಿ ನಡೆಸಿರುವ ಷಡ್ಯಂತ್ರದ ಆಡಿಯೋ ದಾಖಲೆ ಇದ್ದು, ಅದನ್ನು ಸಕಾಲದಲ್ಲಿ ಬಿಡುಗಡೆಗೊಳಿಸುವುದಾಗಿ ಹೇಳಿದರು.
ಮೈತ್ರಿ ಸರ್ಕಾರ ರಕ್ಷಿಸುತ್ತೇನೆ, ಪತನಗೊಳಿಸಲು ಬಿಡುವುದಿಲ್ಲ, ನಾವು ಜೋಡೆತ್ತುಗಳು ಎಂದು ಹೇಳುತ್ತಲೇ ಮೀರ್ ಸಾಧಿಕ್ ಆಗಿಲ್ಲವೇ ಎಂದು ಶಿವಕುಮಾರ್ ಅವರನ್ನು ಪ್ರಶ್ನಿಸಿದ್ಧಾರೆ. ಮುನಿರತ್ನ ಸೇರಿದಂತೆ ಹಲವು ಕಾಂಗ್ರೆಸ್ ಶಾಸಕರು ಪಕ್ಷ ಬಿಟ್ಟು ಹೋಗುವಂತೆ ಪುಸಲಾಯಿಸಿದ್ದು ಯಾರು? ಕಾಂಗ್ರೆಸ್ ಶಾಸಕರು ಪಕ್ಷ ಬಿಡಲು ಕಾರಣರು ಯಾರು ಎಂಬುದನ್ನು ಶಿವಕುಮಾರ್ ತಿಳಿಸಬೇಕು ಎಂದರು.
ಸಮ್ಮಿಶ್ರ ಸರ್ಕಾರ ಪತನ ಹಾಗೂ ಕಾಂಗ್ರೆಸ್ ಶಾಸಕರು ಪಕ್ಷ ಬಿಟ್ಟು ಹೋಗಲು ಕಾರಣರು ಯಾರು ಎಂಬುದನ್ನು ಡಿ.ಕೆ.ಶಿವಕುಮಾರ್ ತಾವು ನಂಬಿದ ದೇವರ ಮುಂದೆ ಪ್ರಮಾಣ ಮಾಡಲಿ. ಆರ್.ಆರ್.ನಗರ ಚುನಾವಣೆಯಲ್ಲಿ ಸೋಲಿನ ಸುಳಿವು ಸಿಗುತ್ತಿದ್ದಂತೆ ಮುನಿರತ್ನ ಹಣ ತೆಗೆದುಕೊಂಡು ಬಿಜೆಪಿ ಹೋಗಿದ್ದಾರೆ ಆರೋಪ ಮಾಡುತ್ತಿದ್ಧಾರೆ ಎಂದರು.



