ಡಿವಿಜಿ ಸುದ್ದಿ, ಬೆಳಗಾವಿ: 20 ವರ್ಷಗಳಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ ಮಾಡುವುದು, ಅವರ ಮನೆ ಬಾಗಿಲಿಗೆ ಹೋಗಿ ಮನವಿ ಸಲ್ಲಿಸುವುದು ಮಾಡಿದ್ದೇವೆ. ಇನ್ಮುಂದೆ ಏನಿದ್ದರೂ ಹೋರಾಟದ ಮಾರ್ಗ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದಿಂದ ಪ್ರವರ್ಗ 2(ಎ)ಗೆ ಮತ್ತು ಕೇಂದ್ರದಿಂದ ಒಬಿಸಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಅ.28ರಂದು ನಡೆಯಲಿದೆ. ಈ ಉಪವಾಸ ಸತ್ಯಾಗ್ರಹದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಂಡು ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ನಮ್ಮ ಸಮಾಜದಲ್ಲಿ ಶೇ. 90ರಷ್ಟು ಬಡವರು, ಕೃಷಿಯೇ ಮೂಲ ಉದ್ಯೋಗವಾಗಿದ್ದು, ಮೀಸಲಾತಿ ಸಿಗಬೇಕು ಎನ್ನುವುದು ನ್ಯಾಯಯುತ ಬೇಡಿಕೆಯಾಗಿದೆ. 2012ರಲ್ಲಿ ನಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ್ದೆವು. ಆಗಿನ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿತ್ತು. ಆ ಸಮಿತಿಯು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ಎಂಟು ವರ್ಷಗಳಾದರೂ ನಮ್ಮ ಬೇಡಿಕೆ ಈಡೇರಿಲ್ಲ. ಈ ಬಾರಿ ರಾಜ್ಯದ ವಿವಿಧ ಭಾಗದಿಂದ ಜನರು ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.



