ಡಿವಿಜಿ ಸುದ್ದಿ, ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಮೇಲ್ವಿಚಾರಣೆ ಸಮಿತಿ ರಚಿಸಿರುವುದನ್ನು ಸರ್ಕಾರ ಪುನರ್ ಪರಿಶೀಲಿಸಬೇಕು ಎಂದು ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ ಮನವಿ ಸಲ್ಲಿಸಿದರು .
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷ ರೇಣುಕಾನಂದ ಸ್ವಾಮೀಜಿ ನೇತೃತ್ವದಲ್ಲಿ ಒಕ್ಕೂಟದ ನಿಯೋಗ ಭೇಟಿ ನೀಡಿ ಮನವಿ ಸಲ್ಲಿಸಿದರು.
ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹಿಂದುಳಿದ, ದಲಿತ ಹಾಗೂ ಅಪಾರ ಪ್ರಮಾಣದ ಭಕ್ತರಿದ್ದಾರೆ. ಈಡಿಗ ಸಮುದಾಯದ ಡಾ.ರಾಮಪ್ಪ ನೇತೃತೃದ ಧರ್ಮದರ್ಶಿ ಮಂಡಳಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಮೂಲಕ ದೇವಸ್ಥಾನದ ಕೀರ್ತಿ ಹೆಚ್ಚಿಸಿದೆ.

ಕೆಲವು ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ನೀಡಬೇಕು. ಈ ಟ್ರಸ್ಟ್ ಗೆ ಧಾರ್ಮಿಕ, ಸಾಮಾಜಿಕ ಕಾರ್ಯಗಳ ನಿರ್ವಹಣೆ ಜವಾಬ್ದಾರಿ ನೀಡಿ, ಜಿಲ್ಲಾಧಿಕಾರಿ ರಚಿಸಿದ ಮೇಲ್ವಿಚಾರಣೆ ಸಮಿತಿಯನ್ನು ಕೈಬಿಡಬೇಕು ಎಂದು ಕೋರಿದ್ದು, ಮಾಹಿತಿ ತರಿಸಿಕೊಂಡು ಸೂಕ್ತ ಕ್ರಮವಹಿಸುವುದಾಗಿ ಬಿಎಸ್ ವೈ ಭರವಸೆ ನೀಡಿದ್ದಾರೆ.
ನಿಯೋಗದಲ್ಲಿ ಒಕ್ಕೂಟದ ಮಠಾಧೀಶರಾದ ಮಧುರೆ ಹೊಸದುರ್ಗ ಭಗೀರಥ ಪೀಠಾಧಿಪತಿ ಪುರುಷೋತ್ತಮಾನಂದ ಪುರಿ ಸ್ವಾಮಿ, ಹೊಸದುರ್ಗ ಕನಕಗುರು ಪೀಠದ ಈಶ್ವರಾನಂದ ಪುರಿ ಸ್ವಾಮಿ, ಕುಂಚಿಟಿಗ ಮಹಾ ಸಂಸ್ಥಾನದ ಶಾಂತವೀರ ಸ್ವಾಮೀಜಿ ಇನ್ನಿತರ ಮಠಾಧೀಶರು ಉಪಸ್ಥಿತರಿದ್ದರು.



