ಡಿವಿಜಿ ಸುದ್ದಿ, ಬೆಂಗಳೂರು: ಈ ಬಾರಿಯ ಕನ್ನಡ ರಾಜೋತ್ಸವ ಪ್ರಶಸ್ತಿ ಸಾಧಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
ಬಳಿಕ ಮಾತನಾಡಿದ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಭಾಷೆಯನ್ನು ಬಳಸಿದಷ್ಟು ಬೆಳೆಯುತ್ತಾ ಹೋಗುತ್ತದೆ. ಕನ್ನಡ ಭಾಷೆಗೆ ತನ್ನದೇ ಆದ ಮಹತ್ವವಿದ್ದು, ಕನ್ನಡವನ್ನು ಉಳಿಸಿ ಬೆಳೆಸೋಣ ಎಂದು ಕರೆ ನೀಡಿದರು. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದು, ಕನ್ನಡ ನಾಡು-ನುಡಿಗೆ ಇನ್ನಷ್ಟು ಸೇವೆ ದೊರೆಯಲಿ ಎಂದರು.
ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆಯ ರೈತ ಮಹಿಳೆ ಎಸ್.ವಿ. ಸುಮಂಗಲಮ್ಮ ವೀರಭದ್ರಪ್ಪ, ಬರಗಾಲ ಪೀಡಿತ ತಮ್ಮ ಜಿಲ್ಲೆಯಲ್ಲಿ ಸಂಕಷ್ಟ ಪರಿಸ್ಥಿತಿಯಲ್ಲೂ ರೈತರು ಕೃಷಿಯಲ್ಲಿ ತೊಡಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಪ್ರವೃತ್ತಿಯವರಲ್ಲ. ಸಂಕಷ್ಟದಲ್ಲೂ ಬದುಕುವ ಕಲೆಯನ್ನು ರೂಢಿಸಿಕೊಂಡಿದ್ದಾರೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ತಿಳಿಸಿದರು.



