ನವದೆಹಲಿ: ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗುವ ವಿಶ್ವಾಸದಲ್ಲಿ ದೆಹಲಿಯತ್ತ ಪ್ರಯಾಣಿಸಿದ್ದ ಸಿಎಂ ಯಡಿಯೂರಪ್ಪಗೆ ನಿರಾಸೆಯಾಗಿದೆ. ಇನ್ನು ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಸಿಎಂ ಏನು ಹೇಳ್ತಾರೆ ಎಂದು ಕಾದು ಕುಳಿತಿದ್ದರು. ಆದರೆ, ಹೈಕಮಾಂಡ್ ಸಂಪುಟ ವಿಸ್ತರಣೆಗೆ ಇನ್ನು ಗ್ರೀನ್ ಸಿಗ್ನಲ್ ನೀಡಿಲ್ಲ. ಇನ್ನು ಎರಡ್ಮೂರು ದಿನಗಳಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಪ್ರಕಟಿಸಲಿದೆ ಸಿಎಂ ಯಡಿಯೂರಪ್ಪ ಹೇಳಿದ್ದು, ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.
ಜೆ.ಪಿ.ನಡ್ಡಾ ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ವರಿಷ್ಠರು ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಜೆ.ಪಿ.ನಡ್ಡಾ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.
ಇನ್ನು ಎರಡು ಮೂರು ದಿನಗಳಲ್ಲಿ ವರಿಷ್ಠರು ತಮ್ಮ ನಿರ್ಧಾರ ತಿಳಿಸುತ್ತಾರೆ. ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದನ್ನು ವರಿಷ್ಠರೇ ನಿರ್ಧರಿಸಲಿದ್ದಾರೆ ಎಂದು ಹೇಳಿದರು. ಈ ಮೂಲಕ ಸಚಿವಾಕಾಂಕ್ಷಿಗಳ ಎದೆಯಲ್ಲಿ ಮತ್ತೆ ನಡುಕ ಉಂಟಾಗಿದೆ.



