ಡಿವಿಜಿಸುದ್ದಿ.ಕಾಂ. ದಾವಣಗೆರೆ: ದೇಶದ ಪವಿತ್ರ ಆರ್ಥಿಕತೆಗೆ ಆಗ್ರಹಿಸಿ ಬೆಂಗಳೂರಲ್ಲಿ ರಂಗಕರ್ಮಿ ಪ್ರಸನ್ನ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಬೆಂಬಲ ಸೂಚಿಸಿದರು.
ನಗರದ ಅಂಬೇಡ್ಕರ್ ವೃತ್ತದ ಬಳಿ ಪ್ರಸನ್ನ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿ ಸಂಕೇತಿಕವಾಗಿ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಂಗಕರ್ಮಿ ಪ್ರಸನ್ನ ಅವರ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಂದಿಸಿ, ದೇಶವನ್ನು ಪವಿತ್ರ ಆರ್ಥಿಕತೆಯತ್ತ ಮುನ್ನೆಡೆಯಲು ಕ್ರಮ ಕೈಗೊಳ್ಳಬೇಕು.
ದೇಶದಲ್ಲಿ ಆರ್ಥಿಕತೆ ಕುಸಿತದಿಂದ ಸಾಕಷ್ಟು ಜನ ಆತಂಕದಲ್ಲಿ ಬದುಕುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಯುವಕರು, ಮಹಿಳೆಯರು, ರೈತರು, ಭಾರೀ ಸಂಕಷ್ಟದಲ್ಲಿದ್ದು, ಪ್ರಸನ್ನ ಅವರ ಆರ್ಥಿಕ ಸುಧಾರಣೆಯನ್ನು ಸ್ವೀಕರಿಸಿ ಜಾರಿಗೊಳಿಸಬೇಕು ಎಂದರು ರೈತ ಸಂಘದ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್ ಆಗ್ರಹಿಸಿದರು.
ಕಮ್ಯೂನಿಸ್ಟ್ ಪಾರ್ಟಿ ಕಾರ್ಯದರ್ಶಿ ಎಚ್.ಕೆ. ರಾಮಚಂದ್ರಪ್ಪ, ರೈತ ಮುಖಂಡರಾದ ಗುಮ್ಮನೂರು ಬಸವರಾಜ್, ಕಾಡಜ್ಜಿ ಪ್ರಕಾಶ್, ಪಾಮೇನಹಳ್ಳಿ ಗೌಡ್ರು ಶೇಖರಪ್ಪ, ಕೈದಾಳ್ ವಸಂತಕುಮಾರ್, ಕೋಲ್ಕುಂಟೆ ಹುಚ್ಚೆಂಗಪ್ಪ ಸೇರಿದಂತೆ ಮತ್ತಿತರರು ಉಪಸ್ಥತಿತರಿದ್ದರು.



