ಬೆಂಗಳೂರು: ಯಾರು ನಮ್ಮಿಂದ ಸಹಾಯ ಪಡೆದುಕೊಂಡು ಸರ್ಕಾರ ರಚನೆ ಮಾಡಿ, ಎಲ್ಲ ಅನುಭವಿಸುತ್ತಿದ್ದಾರೋ ಅವರು ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರಲಿಲ್ಲ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯತ್ವಕ್ಕೆ ಜೂನ್ ನಲ್ಲಿ ನಡೆದ ಚುನಾವಣೆ ವೇಳೆ ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಮೊದಲ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಪಟ್ಟಿ ಬಿಡುಗಡೆಯಾದಾಗ ನನ್ನ ಹೆಸರು ಕೈ ಬಿಟ್ಟು ಹೋಗಿತ್ತು. ಇದು ಏನಾಯಿತು ಎಂದು ತಿಳಿಯಲಿಲ್ಲ. ಹಾಗೆ ನೋಡಿದರೆ ಸಂಘ ಪರಿವಾರದಿಂದ ನನಗೆ ಹೆಚ್ಚು ಸಹಕಾರ ಸಿಕ್ಕಿತ್ತು. ಆದರೆ ಈಗ ಕೋರ್ಟ್ ಗೆ ವಿಷಯ ಹೋದಾಗ ನಮಗೆ ಸಿಗಬೇಕಾದ ಸಹಕಾರ ಸಿಗಲಿಲ್ಲ. ಯಾಕೆ ಹೀಗಾಯ್ತು ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನು ಎದುರಿಸಿ ನಿಲ್ಲುತ್ತೇನೆ. ವಿಧಾನ ಪರಿಷತ್ ಶಾಸಕ ಸ್ಥಾನವನ್ನು ಹೈಕೋರ್ಟ್ ಅನರ್ಹ ಮಾಡಿಲ್ಲ. ಹೈಕೋರ್ಟ್ ನೀಡಿರುವ ಮಧ್ಯಂತರ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ. ಹಾಗೆಂದ ಮಾತ್ರಕ್ಕೆ ಸಚಿವ ಸ್ಥಾನಕ್ಕೆ ನಾನು ಕಾಯುತ್ತಿದ್ದೇನೆ ಎಂದಲ್ಲ. ನಾನು ರಾಜಕಾರಣವನ್ನು ವ್ಯವಹಾರವಾಗಿ ತೆಗೆದುಕೊಂಡಿಲ್ಲ, ಸಾಂಸ್ಕೃತಿಕವಾಗಿ ತೆಗೆದುಕೊಂಡಿದ್ದೇನೆ. ಸಚಿವನಾಗಿ ನನ್ನ ಕಾರ್ಯ ವೈಖರಿ ಜನತೆಗೆ ಗೊತ್ತಿದೆ. ಹೈಕೋರ್ಟ್ ತೀರ್ಪು ಕೇವಲ ಸಚಿವ ಸ್ಥಾನಕ್ಕೆ ಸೀಮಿತವಾಗಿದೆ. ಆದರೆ, ವಿಧಾನಪರಿಷತ್ ಸದಸ್ಯತ್ವ ಸ್ಥಾನ ಅಬಾಧಿತವಾಗಿದೆ. ಎಂಎಲ್ಸಿಯಾಗಿ ಮುಂದುವರೆಯಲು ಕಾನೂನು ಅಡ್ಡಿ ಇಲ್ಲ ಎಂದರು.
ನಾನು ಸಾ.ರಾ.ಮಹೇಶ್ ಬಗ್ಗೆ ಮಾತನಾಡಲ್ಲ. ಆ ಕೊಚ್ಚೆ ಗುಂಡಿಗೆ ಕಲ್ಲೆಸೆದು ನನ್ನ ಸಮವಸ್ತ್ರ ಮಾಲಿನ್ಯ ಮಾಡಿಕೊಳ್ಳುವುದಿಲ್ಲ ಎಂದರು. ಮಿತ್ರ ಮಂಡಳಿಯವರು ಈಗಲೂ ನನ್ನ ಜತೆ ಇದ್ದಾರೆ. ನಿನ್ನೆಯೂ ರಮೇಶ್ ಜಾರಕಿಹೊಳಿ, ಆರ್.ಅಶೋಕ್, ಎಸ್ಟಿ. ಸೋಮಶೇಖರ್ ಸೇರಿದಂತೆ ಬಹುತೇಕ ಎಲ್ಲರೂ ನನಗೆ ಫೋನ್ ಮಾಡಿ ಬೆಂಬಲ ಸೂಚಿಸಿದ್ದಾರೆ ಎಂದರು.



