ಬೆಂಗಳೂರು: ಕೇಂದ್ರ ಸರ್ಕಾರದ ಜಾರಿಗೆ ತರಲು ಉದ್ದೇಶಿಸಿರುವ ಮೂರು ಕೃಷಿ ಮಸೂದೆಯನ್ನು ವಿರೋಧಿಸಿ ರೈತ ಸಂಘಟನೆಗಳು ಕರೆನೀಡಿರುವ ಇಂದಿನ ಭಾರತ ಬಂದ್ ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಲವೆಡೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ವಿವಿಧ ಭಾಗದಿಂದ ಬಂದಿದ್ದ ರೈತರು ಪ್ರತಿಭಟನೆ ನಡೆಸಿದರು. ಮೈಸೂರು ಬ್ಯಾಂಕ್ ಮತ್ತು ಟೌನ್ ಹಾಲ್ ನಲ್ಲಿ ಪ್ರತಿಭಟನೆ ನಡೆಯಿತು. ಎಲ್ಲೆಡೆ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ. ದಾವಣಗೆರೆಯಲ್ಲಿ ಪಿಬಿ ರಸ್ತೆ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯಲ್ಲಿಯೂ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚೆನ್ನಮ್ಮ ವೃತ್ತದಲ್ಲಿ ನೂರರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾನೂನನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು. ಸಾರಿಗೆ ಬಸ್ ಸ್ಥಗಿತಗೊಂಡಿದ್ದು, ಖಾಸಗಿ ವಾಹನ ಕೂಡ ಸ್ತಬ್ಧಗೊಂಡಿದೆ.
ಮೈಸೂರಿನಲ್ಲಿಯೂ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ವಾಹನಗಳ ಸಂಖ್ಯೆ ವಿರಳವಾಗಿದೆ. ಕೆಲವೆಡೆ ಅಂಗಡಿಗಳು ತೆರೆದಿದ್ದರೂ ರೈತರು ಅಂಗಡಿ ಮಾಲೀಕರ ಮನವೊಲಿಸಿ ಬಂದ್ ಮಾಡಿಸುತ್ತಿದ್ದ ದೃಶ್ಯ ಕಂಡುಬಂತು.
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ರೈತರು ಬೆಳಗ್ಗೆಯೇ ಪ್ರತಿಭಟನೆಗೆ ಇಳಿದಿದ್ದು, ರೈತರು ಉರುಳು ಸೇವೆ ಮಾಡಿ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು. ಉಳಿದಂತೆ ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜನಜೀವನ ಸಹಜಸ್ಥಿತಿಯಲ್ಲಿದ್ದರೂ ಪ್ರತಿಭಟನೆ ನಡೆಯುತ್ತಿವೆ.



