ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ, ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ಖಂಡಿಸಿ ರೈತರು ಸಿಲಿಕಾನ್ ಸಿಟಿ ಬೆಂಗಳೂರುರಲ್ಲಿ ಬೃಹತ್ ಬಾರುಕೋಲು ಚಳವಳಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ವಿವಿಧ ಭಾಗದಿಂದ ಬಂದಿದ್ದ ಅನ್ನದಾತರು, ಹಸಿರು ಶಾಲು ಹೊದ್ದು ಕೈಯಲ್ಲಿ ಬಾರುಕೋಲು ಹಿಡಿದು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧ ಮುತ್ತಿಗೆ ಹಾಕಲು ಪ್ರತಿಭಟನಾ ಜಾಥಾ ನಡೆಸಿದರು. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲ್ವೆ ನಿಲ್ದಾಣದಿಂದ ಆನಂದರಾವ್ ವೃತ್ತದ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದಾಗ ಮಾರ್ಗಮಧ್ಯೆ ಫ್ರೀಡಂಪಾರ್ಕ್ ಬಳಿಯೇ ಪೊಲೀಸರು ತಡೆದರು.
ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ದಪ್ಪ ಚರ್ಮದ ಸರ್ಕಾರಗಳಿಗೆ ಬಾರುಕೋಲು ಮೂಲಕ ಸರಿದಾರಿಗೆ ತರಬೇಕಿದೆ.ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗಿರುವ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡಿದ್ದೇವೆ. ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಭೂ ಸುಧಾರಣಾ ಕಾಯ್ದೆಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಸರ್ಕಾರದ ಬುಡ ಅಲುಗಾಡುತ್ತದೆ ಎಂಬ ಎಚ್ಚರಿಕೆ ನೀಡಿದರು.
ಈ ವೇಳೆ ಭೂಸುಧಾರಣಾ ಕಾಯ್ದೆಗೆ ಜೆಡಿಎಸ್ ಬೆಂಬಲ ನೀಡಿದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಪ್ರತಿಭಟನಾ ರ್ಯಾಲಿಗೆ ಆಗಮಿಸುತ್ತಿದ್ದ ರೈತರನ್ನು ನಗರದ ಹೊರವಲಯದಲ್ಲಿ ತಡೆಯುವ ಪ್ರಯತ್ನ ಕೂಡ ಮಾಡಲಾಗಿದೆ.



