ದಾವಣಗೆರೆ: ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದ್ದು, ರೈತರೇ ತಮ್ಮ ಬೆಳೆ ಸಮೀಕ್ಷೆ ನಡೆಸಬಹುದಾಗಿದೆ.
ಸ್ವತಃ ರೈತರು ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾ ನಂಬರ್ವಾರು ಬೆಳೆದ ವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಷ್ಕಿ, ನೀರಾವರಿ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆಯ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ಅಪ್ಲೋಡ್ ಮಾಡಬಹುದಾಗಿದೆ. ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21 ಬೆಳೆ ದರ್ಶಕ್ ಆ್ಯಪ್ನ್ನು ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಕೃಷಿ, ರೇಷ್ಮೆ, ತೋಟಗಾರಿಕಾ ಬೆಳೆಗಳ ವಿಸ್ತೀರ್ಣ ಎಣಿಕೆ ಕಾರ್ಯಗಳಲ್ಲಿ ಬೆಳೆ ವಿಮೆ ಯೋಜನೆಯ ಸರ್ವೆ ನಂಬರ್ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಸರ್ವೆ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ಹಾಗೂ ಅರ್ಹ ಫಲಾನುಭವಿಗಳನ್ನು ಗುರುತಿಸಲು ಬೆಳೆ ಸಮೀಕ್ಷೆ ಮಾಹಿತಿ ಅಗತ್ಯವಾಗಿದೆ.
ಹಾಗೂ ಆರ್.ಟಿ.ಸಿ.ಯಲ್ಲಿ ಬೆಳೆ ವಿವರಗಳ ದಾಖಲಾತಿಗಾಗಿ. ಎನ್.ಡಿ.ಆರ್.ಎಫ್/ಎಸ್.ಬಿ.ಆರ್.ಎಫ್ ಅಡಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಹಾನಿಗೊಳಗಾದ ಬೆಳೆಯ ವಿಸ್ತೀರ್ಣದ ವಿವರ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯು ಅತ್ಯಗತ್ಯವಾಗಿದ್ದು, ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ನಮೂದಿಸುವಂತೆ ಮನವಿ ಮಾಡಲಾಗಿದೆ.
ಆಯಾ ಗ್ರಾಮದಲ್ಲಿರುವ ವಿದ್ಯಾವಂತ ಯುವಕರನ್ನು ಖಾಸಗಿ ನಿವಾಸಿಗಳೆಂದು ಗುರುತಿಸಲಾಗಿದ್ದು ಅವರ ಸಹಾಯದಿಂದಲೂ ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ತಾವು ಬೆಳೆದ ಬೆಳೆಯನ್ನು ದಾಖಲಿಸಬಹುದಾಗಿದೆ. ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ರೈತರೇ ಖುದ್ದು/ಖಾಸಗಿ ನಿವಾಸಿಗಳ ಸಹಾಯ ಪಡೆದು ಬೆಳೆ ಸಮೀಕ್ಷೆ ಮಾಡಲು ಅವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



