ಬೆಂಗಳೂರು: ರಾಜಕಾರಣದಲ್ಲಿ ಸೋಲು- ಗೆಲುವು ಸಾಮಾನ್ಯ. ಆದರೆ, ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಯಾರು ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡ ಕಿಡಿಕಾರಿದ್ದಾರೆ.
ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡ, ಕುಮಾರಸ್ವಾಮಿ ಹೊರತಾಗಿಯೂ ಪಕ್ಷದಲ್ಲಿ ಸಾಕಷ್ಟು ನಾಯಕರಿದ್ದಾರೆ. ಪಕ್ಷ ಯಾರೊಬ್ಬರನ್ನೂ ನೆಚ್ಚಿಕೊಂಡಿಲ್ಲ. ಕಳೆದ ಮೂರು ತಿಂಗಳಿಂದ ಪಕ್ಷದ ಬಗ್ಗೆ ಹಲವಾರು ರೀತಿ ವ್ಯಾಖ್ಯಾನ ನಡೆಯುತ್ತಿವೆ. ಅದನ್ನು ಮನರಂಜನೆ ಕಾರ್ಯಕ್ರಮ ಎಂದು ಹೇಳಬಹುದು, ವೈಯಕ್ತಿಕವಾಗಿ ಯಾರ ಬಗ್ಗೆಯೂ ತಾವು ಮಾತನಾಡುವುದಿಲ್ಲ. ರಾಜಕಾರಣಿಗಳು ಏನೇನು ಮಾತಾಡುತ್ತಿದ್ದಾರೆ ಎಂಬುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ ಎಂದರು.
ಪ್ರಾದೇಶಿಕ ಪಕ್ಷ ಉಳಿಸಿಕೊಳ್ಳಲು ಎಷ್ಟು ಕಷ್ಟ ಎನ್ನುವುದು ಆ ಪಕ್ಷದ ಮುಖ್ಯಸ್ಥರಿಗೆ ಗೊತ್ತಿರುತ್ತದೆ. ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಮಾತಾಡುವುದನ್ನು ನೋಡಿದ್ದೇನೆ. ಇದಕ್ಕೆ ಕಾರಣ ಕುಮಾರಸ್ವಾಮಿಯಾ, ರೇವಣ್ಣನಾ? ಯಾರು ಕಾರಣ? ಎಂದು ಪ್ರಶ್ನಿಸಿದರು.
ನಾನು ಮೂಲತಃ ಕಾಂಗ್ರೆಸ್ಸಿಗ. ಈ ಹಿಂದೆ ತಮ್ಮನ್ನು ಎಲ್ಲರೂ ಹೊರಹಾಕಿದಾಗ ಏಕಾಂಕಿಯಾಗಿದ್ದೆ. ಈಗ ಯಾರ ಹೆಸರನ್ನೂ ಹೇಳುವುದಿಲ್ಲ. ಮತ್ತೆ ವಾಪಾಸ್ ಎಲ್ಲಾ ತಮ್ಮ ಬಳಿಯೇ ಬಂದರು. ಯಾರಾದರೂ ತಮಗೆ ಹತ್ತು ರೂಪಾಯಿ ಕೊಟ್ಟಿದ್ದಾರಾ? ಈಗ ಕೆಲವರು ಬದುಕಿದ್ದಾರೆ, ಒಬ್ಬ ಕನ್ನಡಿಗ ಪ್ರಧಾನಿ ಆಗುವ ಮಟ್ಟವೂ ಬಂತು. ನಾನು ಪ್ರಧಾನಿ ಆಕಾಂಕ್ಷಿಯಾಗಿರಲಿಲ್ಲ, ಅಪೇಕ್ಷೆ ಇರಲಿಲ್ಲ, ಅದು ವಿಧಿ, ನನ್ನ ರಾಜೀನಾಮೆ ನಂತರ ನನ್ನ ಬಿಟ್ಟು ಸರ್ಕಾರ ಕೂಡ ಮಾಡಿದರು ಎಂದು ಹಳೆಯ ಘಟನೆಗಳನ್ನು ನೆನಪಿಸಿದರು.



