ಬೀದರ್: ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಶಂಕುಸ್ಥಾಪನೆ ನಂತರ ಮಾತನಾಡಿದ ಅವರು, ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ ಬಿಡುಗಡೆ ಮಾಡಿದ್ದು, ಇನ್ನು 100 ಕೋಟಿ ರೂಗಳನ್ನು ವಾರದೊಳಗೆ ಬಿಡುಗಡೆ ಮಾಡಿ, ಟೆಂಡರ್ ಪ್ರಕ್ರಿಯೆ ಪೂರ್ಣವಾದ ಕೂಡಲೇ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದರು.
ಇದೊಂದು ಕರ್ನಾಟಕ ಇತಿಹಾಸದಲ್ಲಿ ಇಂದು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ. ಸಾಧನೆ ಮಾತನಾಡಬೇಕು. ಮಾತಾಡುವುದು ಸಾಧನೆಯಾಗಬಾರದು ಎನ್ನುವುದು ತಮ್ಮ ಮನೋಭಾವವಾಗಿದೆ. ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಅಂತೆಯೇ ಎರಡು ವರ್ಷದೊಳಗೆ ಅನುಭವ ಮಂಟಪ ನಿರ್ಮಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹಸ್ತದಿಂದ ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.
ಅವರು ಇವರು ಎನ್ನದೇ ಎಲ್ಲ ಸಮುದಾಯದ ಜನರು ಸೇರಿ ಚರ್ಚಿಸಿ ಚಿಂತನ ಮಂಥನ ನಡೆಸುತ್ತಿದ್ದ ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿಯಾಗಿದೆ. ಸಾಮಾಜಿಕ ಬದಲಾವಣೆ ತರುವಲ್ಲಿ ಅನುಭವ ಮಂಟಪದ ಪಾತ್ರವು ಅತೀ ಮಹತ್ವದ್ದಾಗಿದೆ. ಮನುಕುಲದ ಏಳ್ಗೆಗೆ ಇಡೀ ವಚನ ಸಾಹಿತ್ಯ ಮಾರ್ಗದರ್ಶಿಯಾಗಿದೆ ಎಂದರು.

ಅಣ್ಣ ಬಸವಣ್ಣನವರು ಈ ಕಲ್ಯಾಣ ನಾಡಿನಿಂದ ಹೊರಹೊಮ್ಮಿದ ಈ ದೇಶ ಕಂಡ ಬಹುದೊಡ್ಡ ವಿಶ್ವಗುರು ಅನ್ನುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ. ಗೋ.ರು.ಚ ಅವರಂತಹ ಇನ್ನೂ ಅನೇಕ ಹಿರಿಯ ಸಾಹಿತಿಗಳ ಸಲಹೆ ಪಡೆದು, ಈ ಭಾಗದ ಜನರ ಬೇಡಿಕೆಯಂತೆ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ, ಪ್ರತಿ ವರ್ಷ ಬಸವ ಉತ್ಸವ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಇಂತಹ ಒಳ್ಳೆಯ ಕಾರ್ಯಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದರು.
ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಪ್ರಧಾನಮಂತ್ರಿ ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದಂತೆ, ಇಡೀ ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಅನುಭವ ಮಂಟಪ ನಿರ್ಮಾಣಕ್ಕೆ ಇಂದು ಮುಖ್ಯಮಂತ್ರಿಗಳು ಭೂಮಿ ಪೂಜೆ ನೆರವೇರಿಸಿದ್ದು ಕೂಡ ಒಂದು ಐತಿಹಾಸಿಕ ಪ್ರಯತ್ನ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮಾತನಾಡಿ, ಶ್ರೀ ಚನ್ನಬಸವ ಪಟ್ಟದ್ದೇವರ ಸಂಕಲ್ಪ ಇಂದು ಕೂಡಿ ಬಂದಿದೆ. ಶ್ರೀ ಬಸವಲಿಂಗ ಪಟ್ಟದ್ದೇವರು ಸೇರಿದಂತೆ ಈ ಭಾಗದ ಎಲ್ಲ ಶ್ರೀಗಳ ಮತ್ತು ಜನರ ಆಶಯದಂತೆ ಕಾಮಗಾರಿ ಬೇಗ ಪೂರ್ಣವಾಗಲು ಶ್ರಮಿಸಲಾಗುವುದು ಎಂದು ತಿಳಿಸಿದರು
ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಬಸವ ಅನುಯಾಯಿಗಳಿಗೆ ಸಂತಷದ ದಿನ. ಈ ಕಟ್ಟಡ ಬೇಗ ನಿರ್ಮಾಣವಾಗಬೇಕು. ಈ ಮೂಲಕ ಬಸವಕಲ್ಯಾಣದ ಕೀರ್ತಿ ವಿಶ್ವದೆಲ್ಲೆಡೆ ಹರಡಲಿ ಎಂದು ತಿಳಿಸಿದರು.



