ದಾವಣಗೆರೆ: ನಾಳೆ( ಜ. 16) ದಾವಣಗೆರೆ ಉತ್ತರ, ದಕ್ಷಿಣ ಮತ್ತು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ ಅಭಿನಂದನಾ ಸಮಾರಂಭ ನಡೆಯಲಿದೆ.
ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಸಮಾವೇಶವನ್ನು ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದು, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಮಾಜಿ ಸಚಿವರು, ಶಾಸಕರು, ಎಐಸಿಸಿ, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಪರಶುರಾಮ್ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಒಟ್ಟು 41 ಪಂಚಾಯಿತಿಯಿಂದ ದಾವಣಗೆರೆ ಉತ್ತರದಲ್ಲಿ 86 ಜನ, ದಕ್ಷಿಣದಲ್ಲಿ 56 ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ 209 ಜನರ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಸಮಾವೇಶದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಹೋರಾಟ ನಡೆಸಲು ಚರ್ಚಿಸಲಾಗುವುದು. ಜ. 20ರಂದು ಬೆಂಗಳೂರಿನಲ್ಲಿ ಕೆಪಿಸಿಸಿಯಿಂದ ಕಿಸಾನ್ ಅಧಿಕಾರ್ ದಿವಸ್ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಸರ್ಕಾರ ರೈತರಿಗೆ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿಲ್ಲ. ಖರೀದಿ ಕೇಂದ್ರ ತೆರೆದಿಲ್ಲ. ಎಪಿಎಂಸಿ ಆವರ್ತ ನಿಧಿ ಬಳಕೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಭದ್ರಾ ನಾಲೆಗೆ ಇದೇ 6 ರಿಂದ ನೀರು ಬಿಡುತ್ತಿವೆ ಎಂದ್ರೂ, ಇದುವರೆಗೂ ನೀರು ಹರಿಸಿಲ್ಲ. ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ. ಅದು ಮುಗೆಯೋದು ಯಾವಾಗ..? ನೀರು ಬಿಡುವುದು ಯಾವಾಗ ..? ಎಂದರು.
ಈ ಸಂದರಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ, ಜಿ.ಸಿ. ನಿಂಗಪ್ಪ, ಮಾಜಿ ಸದಸ್ಯ ಬಿ. ಕರಿಬಸಪ್ಪ, ಎಪಿಎಂಸಿ ಅಧ್ಯಕ್ಷ ಅಣಜಿ ಚಂದ್ರಶೇಖರಪ್ಪ, ನಾಗರಾಜ್, ಬೂದಾಳ್ ಬಾಬು, ಮಂಜುನಾಥ, ಶಂಭುಲಿಂಗಪ್ಪ, ಎಸ್.ಕೆ. ಮಲ್ಲಿಕಾರ್ಜುನ ಇದ್ದರು.



