ಬೆಂಗಳೂರು : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಬೆಂಗಳೂರಿನಲ್ಲಿ ಉದ್ಧವ್ ಠಾಕ್ರೆ ಪ್ರತಿಕೃತಿ ಸುಟ್ಟು ಹಾಕಿ ತನ್ನ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮಹಾ ರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಒಬ್ಬ ಹುಚ್ಚ, ಅವಿವೇಕಿ. ಬೆಳಗಾವಿ ರಾಜ್ಯದ ಅವಿಭಾಜ್ಯ ಅಂಗ. ಮಹಾರಾಷ್ಟ್ರದ ಕೆಲ ಭಾಗಗಳು ಕರ್ನಾಟಕಕ್ಕೆ ಬರಬೇಕಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ನಡೆದರೆ ರಕ್ತಕ್ರಾಂತಿ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.
ಸಿಎಂ ಯಡಿಯೂರಪ್ಪಗೆ ಶಕ್ತಿ, ಪ್ರೀತಿ, ಬದ್ಧತೆ ಇಲ್ಲ. ಬೆಳಗಾವಿ, ಕಾರವಾರದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಮರಾಠಿಗರ ಪರ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿ ಮಹಾರಾಷ್ಟ್ರ ಗಡಿ ಬಂದ್ ಆಗಲೇಬೇಕು. ಎಂಇಎಸ್ , ಶಿವಸೇನೆಯನ್ನು ಗಡಿಪಾರ್ ಮಾಡಬೇಕು . ಈ ಬಗ್ಗೆ ನಾಳೆ ಬೆಳಗ್ಗೆ 11.30 ಕ್ಕ ಮುಂದಿನ ಹೋರಾಟದ ಬಗ್ಗೆ ಸಭೆ ಸೇರಿ ನಿರ್ಧರಿಸುತ್ತೇವೆ. ಈ ಸಭೆಯಲ್ಲಿ ಎಲ್ಲ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.



