ದಾವಣಗೆರೆ: ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಅಂತರಾಷ್ಟ್ರೀಯ ವಾಹನಗಳು ಬರಲಿದ್ದು, ಎಲೆಕ್ಟ್ರಾನಿಕ್ ಬಸ್ಗಳನ್ನು ನಿಗಮದ ಮೂಲಕ ಓಡಿಸಲು ಒಪ್ಪಂದ ಮಾಡಲಾಗಿದೆ. ನಮ್ಮದೇ ಚಾಲಕರು/ನಿರ್ವಾಹಕರು ಈ ಬಸ್ಗಳನ್ನು ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಶೀಘ್ರದಲ್ಲಿ 4 ರಿಂದ 6 ಕಡೆ ತರಬೇತಿ ಕೇಂದ್ರಗಳನ್ನು ಆರಂಭಿಸಿ ತರಬೇತಿ ನೀಡಲಾಗುವುದು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಕ.ರಾ.ರ.ಸಾ ನಿಗಮದ ನಗರದ ಬಸ್ ನಿಲ್ದಾಣದ ಪುನರ್ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣ ಚಾಲನೆ ನೀಡಿ ಮಾತನಾಡಿದರು.

ವಾಯುಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ ವಾಯುಮಾಲಿನ್ಯವನ್ನು ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಎಲೆಕ್ಟ್ರಾನಿಕ್ ಬಸ್ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದೆ. 1 ಬಸ್ ವೆಚ್ಚ ರೂ.2 ಕೋಟಿ ಇದ್ದು ಕೇಂದ್ರ ಸರ್ಕಾರ ರೂ.55 ಲಕ್ಷ ಸಬ್ಸಿಡಿ ನೀಡಲಿದೆ. ಸಬ್ಸಿಡಿಯಲ್ಲಿ ಖರೀದಿಸಿದ ಏಜೆನ್ಸಿ ಬಸ್ ಇಲಾಖೆಗೆ ನೀಡುವ ಒಪ್ಪಂದ ಮಾಡಿಕೊಳ್ಳಲಾಗುವುದು. ತರಬೇತಿ ಹೊಂದಿದ ನಮ್ಮ ಸಿಬ್ಬಂದಿಗಳು ಇದನ್ನು ನಿರ್ವಹಿಸುವರು ಎಂದರು.
ಕೊರೊನಾ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಸೊರಗಿದೆ ನಿಜ. ಒಟ್ಟಾರೆ 4 ಸಾವಿರ ಕೋಟಿ ಹಾನಿಗೊಳಗಾಗಿದೆ. ಆದರೆ, ನೌಕರರು ಆತಂಕಕ್ಕೆ ಒಳಗಾಗುವುದು ಬೇಡ. ನೌಕರರ ಬದುಕನ್ನು ಬೀದಿಗೆ ಬರಲು ನಾನು ಬಿಡುವುದಿಲ್ಲ.ಕೆಎಸ್ಆರ್ಟಿಸಿ ನೌಕರರು ಇತ್ತೀಚೆಗೆ ನಡೆಸಿದ ಹೋರಾಟ ತಪ್ಪಲ್ಲ. ಆದರೆ ಸಮಯ, ಸಂದರ್ಭ ಗಮನದಲ್ಲಿಟ್ಟುಕೊಂಡು ಮಾಡಬೇಕಿತ್ತು. ಪ್ರತಿಭಟನೆಗೂ ಮುನ್ನ ನೋಟಿಸ್ ನೀಡಿ ಮಾಡಬೇಕು. ದಿಢೀರನೆ ಪ್ರತಿಭಟನೆಗೆ ನಿಲ್ಲುವುದು ಸರಿಯಲ್ಲ. ನೋಟಿಸ್ ನೀಡಿದ್ದರೆ ನಾನೇ ತಕ್ಷಣ ತಮ್ಮನ್ನು ಕರೆಸಿ ಸ್ಪಂದಿಸುತ್ತಿದ್ದೆ. ಕೊರೊನಾ ಹಿನ್ನೆಲೆಯಲ್ಲಿ ಸಹ ತಾವು ಕೇಳದಿದ್ದರೂ ನಾನು ಮುಖ್ಯಮಂತ್ರಿಗಳ ಮನವೊಲಿಸಿ ನಾಲ್ಕು ತಿಂಗಳ ವೇತನಕ್ಕೆ ವ್ಯವಸ್ಥೆ ಮಾಡಿದ್ದೆ. ತಾವು ತಮ್ಮ ಬೇಡಿಕೆಗಳಿಗೆ ಹೋರಾಟ ಮಾಡುವುದು ನಿಮ್ಮ ಹಕ್ಕಾದರೆ ನಾವು ಅದನ್ನು ಪೂರೈಸುವುದು ನಮ್ಮ ಕರ್ತವ್ಯ. ಆದರೆ ನಮ್ಮ ಚಾಲರು, ನಿರ್ವಾಹಕರೇ ತಮ್ಮ ಬಾಳಿಗೆ ಬೆಳಕಾದ ಬಸ್ಸಿಗೆ ಕಲ್ಲು ತೂರಿದ್ದು ಮನಸ್ಸಿಗೆ ಬೇಸರ ತಂದಿದೆ ಎಂದರು.
ಉತ್ತಮ ಸೇವೆ ಸಲ್ಲಿಸಿದ ಚಾಲಕರಿಗೆ ಬೆಳ್ಳಿ ಪದಕ ನೀಡುವಂತೆ, ಪ್ರತಿ ಲೀಟರ್ಗೆ ಹೆಚ್ಚು ಕಿ.ಮೀ ಓಡಿಸುವ ಚಾಲಕರಿಗೆ 11 ಗ್ರಾಂ ಬಂಗಾರದ ಪದಕ ನೀಡುವ ಯೋಜನೆ ಇದೆ. ಈ ನಿಟ್ಟಿನಲ್ಲಿ ಚಾಲಕರು ಉತ್ತಮ ಸೇವೆ ಸಲ್ಲಿಸಬೇಕು. ಸಿಬ್ಬಂದಿಗಳ 10 ಬೇಡಿಕೆಗಳ ಪೈಕಿ 9 ನ್ನು ಪೂರೈಸಲಾಗಿದೆ. ಯಾರೂ ಆತಂತಕ್ಕೆ ಈಡಾಗದೇ ಕರ್ತವ್ಯ ನಿರ್ವಹಿಸಬೇಕು ಎಂದರು.
ಇಲಾಖೆ ಹಾನಿ ಆಗಲು ಕಾರಣ ರಾಜಕೀಯ ಇಚ್ಚಾಶಕ್ತಿ ಕೊರತೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ಆಗಬಹುದೆಂಬ ಆತಂಕ. ಡೀಸೆಲ್ ದರ, ಟೈರ್ ದರ, ಸಂಬಳ ಎಲ್ಲವೂ ಹೆಚ್ಚಾಗುತ್ತಿದೆ. ಆದರೆ ಆದಾಯ ಹೆಚ್ಚಿಸಲು ಆಗುತ್ತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಆದಾಯವನ್ನು ಸರಿದೂಗಿಸುವ ಬಗ್ಗೆ ನನ್ನದೇ ಪರಿಕಲ್ಪನೆಯಿದ್ದು ಈ ಪ್ರಕಾರ 4 ನಿಗಮಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದರು.



