ಬೆಂಗಳೂರು: ಪ್ರತಾಪ್ ಚಂದ್ರ ಶೆಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಇಂದು ನಾಮಪತ್ರ ಸಲ್ಲಿಸಿದರು.
ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಹೊರಟ್ಟಿ ಯವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಎಂಟಿಬಿ ನಾಗರಾಜ್ ಸೇರಿದಂತೆ ಸಚಿವರುಗಳು, ಬಿಜೆಪಿ ಹಾಗೂ ಜನತಾದಳದ ಹಲವು ಶಾಸಕರುಗಳು ಸಾಥ್ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ. ಬಿಜೆಪಿ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ಕಾಂಗ್ರೆಸ್ ನವರು ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ನಾನು ಮಾತನ್ನಾಡೋದಿಲ್ಲ ಎಂದರು.
ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ಬಸವರಾಜ್ ಹೊರಟ್ಟಿ ಅವರಿಗೆ ನಾವು ಸಂಪೂರ್ಣ ಬೆಂಬಲ ಕೊಟ್ಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿ ಇಲ್ಲದೆ ಇದ್ದಲ್ಲಿ ಹೊರಟ್ಟಿಯವರೇ ಅವಿರೋಧ ಆಯ್ಕೆಯಾಗಲಿದ್ದಾರೆ ಎಂದರು.
ಗೋಹತ್ಯೆ ತಿದ್ದುಪಡಿ ಬಗ್ಗೆ ಮಾತನಾಡಿ, ವಿಧಾನ ಪರಿಷತ್ ನಲ್ಲಿ ಗೋಹತ್ಯೆ ತಿದ್ದುಪಡಿ ಕಾಯ್ದೆಗೆ ಒಪ್ಪಿಗೆ ಸಿಗುತ್ತದೆ. ಸಭಾಪತಿ ಆಯ್ಕೆ ಬಳಿಕ ಜೆಡಿಎಸ್ ಜೊತೆ ಕುಳಿತು ಚರ್ಚಿಸುತ್ತೇವೆ ಎಂದರು.



