ಬೆಂಗಳೂರು : ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಬಗ್ಗೆ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸುವ ಮೂಲಕ ವಿಜಯನಗರ ಹೊಸ ಜಿಲ್ಲೆಯಾಗಿದೆ. ಈ ಮೂಲಕ ಬಳ್ಳಾರಿ ಜಿಲ್ಲೆ ವಿಭಜನೆಗೆ ಅಧಿಕೃತವಾಗಿದೆ.
ಈ ಕುರಿತಂತೆ ಕಂದಾಯ ಇಲಾಖೆ(ಭೂ ಮಾಪನ) ಸರ್ಕಾರದ ಅಧೀನ ಕಾರ್ಯದರ್ಶಿ ವಿಟಿ ರಾಜಶ್ರೀ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ( 1964ರ ಕರ್ನಾಟಕ ಅಧಿನಿಯಮ ಸಂಖ್ಯೆ 12)ರ 6ನೇ ಪ್ರಕರಣದ ಮೇರೆಗೆ ಅಗತ್ಯ ಪಡಿಸಲಾದಂತೆ ಬಳ್ಳಾರಿಯ ಜಿಲ್ಲೆಯ ಸರಹದ್ದುಗಳನ್ನು ಮಾರ್ಪಡಿಸಿ, ವಿಜಯ ನಗರ ಜಿಲ್ಲೆ ಎಂಬ ಹೆಸರಿನ ನೂತನ ಜಿಲ್ಲೆಯನ್ನು ರಚಿಸಲಾಗಿದೆ.
ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾ ಕೇಂದ್ರವಾಗಲಿದೆ. ನೂತನ ಜಿಲ್ಲೆಗೆ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ ಹಾಗೂ ಹರಪನಹಳ್ಳಿ ತಾಲೂಕುಗಳನ್ನು ಸೇರ್ಪಡೆಗೊಳಿಸಲಾಗಿದೆ.



