ದಾವಣಗೆರೆ: ಮಾರ್ಚ್ 1 ಮತ್ತು 2ರಂದು ಸಾಹಿತಿ ಎನ್.ಟಿ. ಯರ್ರಿಸ್ವಾಮಿ ಅಧ್ಯಕ್ಷತೆಯಲ್ಲಿ ನಗರದ ಕುವೆಂಪು ಕನ್ನಡ ಭವನದಲ್ಲಿ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಸಾಪ ಅಧ್ಯಕ್ಷ ಮನು ಬಳಿಗಾರ್ ಸಮ್ಮೇಳನ ಉದ್ಘಾಟಿಸಲಿದ್ದು, ಸಂವಾದ, ವಿಚಾರಗೋಷ್ಠಿ, ಕವಿಗೋಷ್ಠಿಗಳ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ರೈತರನ್ನು ಬಾಧಿಸುತ್ತಿರುವ ಕೃಷಿ ಕಾಯ್ದೆಗಳು ಹಾಗೂ ಕೊರೊನಾ ಕುರಿತ ಕವಿಗೋಷ್ಠಿಗಳು ನಡೆಯಲಿವೆ. ಮಾರ್ಚ್ 1ರಂದು ಬೆಳಿಗ್ಗೆ 8.30ಕ್ಕೆ ರಾಷ್ಟ್ರಧ್ವಜ, ನಾಡಧ್ವಜ ಹಾಗೂ ಪರಿಷತ್ತಿನ ಧ್ವಜಾರೋಹಣಗಳು ನೆರವೇರಲಿದ್ದು, ಬೆಳಿಗ್ಗೆ 9.30ಕ್ಕೆ ನಡೆಯುವ ಮೆರವಣಿಗೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಉದ್ಘಾಟಿಸುವರು. ಮೆರವಣಿಗೆ ವಿದ್ಯಾನಗರ 4ನೇ ಬಸ್ ನಿಲ್ದಾಣದಿಂದ ಆರಂಭವಾಗಿ ವಿದ್ಯಾನಗರದ ಮಹಾತ್ಮಗಾಂಧಿ ಸರ್ಕಲ್ ಮೂಲಕ ಕುವೆಂಪು ಕನ್ನಡ ಭವನ ತಲುಪಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಸ್. ಮಂಜುನಾಥ ಕುರ್ಕಿ ತಿಳಿಸಿದ್ದಾರೆ.
ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ಸಾಮಾಜಿಕ ಸಂಬಂಧಗಳ ಬಗ್ಗೆ ಕವನ ವಾಚನಗಳು ನಡೆಯಲಿವೆ. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ನಡೆಲಿದೆ.



