ಬೆಂಗಳೂರು : ಗುಜರಾತ್, ಛತ್ತಿಸಗಢ್ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಚಿಂತನೆ ನಡೆದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ವಿಕಾಸಸೌಧದಲ್ಲಿ ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆ ಮಾತನಾಡಿದ ಅವರು, ಆರೋಗ್ಯದ ದೃಷ್ಟಿಯಿಂದ ಸಾವಯವದತ್ತ ಜನರು ಹೆಚ್ಚು ವಾಲುತ್ತಿರುವುದರಿಂದ ಸಾವಯವ ಪದಾರ್ಥಗಳಿಗೆ ಹೆಚ್ಚು ಮಹತ್ವ ದೊರೆಯುತ್ತಿದೆ.ಹೀಗಾಗಿ ಸಾವಯವ ಕೃಷಿಗೆ ಹೆಚ್ಚಿನ ಮಹತ್ವ ನೀಡಬೇಕಿದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಸಾವಯವ ಕೃಷಿ ವಿವಿ ಸ್ಥಾಪಿಸುವ ಬಗ್ಗೆ ಸಾವಯವ ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಕುರಿತು ಚಿಂತನೆ ನಡೆಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಮಾಹಿತಿ ನೀಡಿದರು. ಕೃಷಿ ಚಟುವಟಿಕೆಗಳಿಗೆ ಕೃಷಿ ಭೂಮಿಗೆ ಹೆಚ್ಚಿನ ರಾಸಾಯನಿಕಗಳನ್ನು ಬಳಸುವುದರಿಂದ ಆರೋಗ್ಯಕರ ಉತ್ಪನ್ನಗಳನ್ನು ಪಡೆಯಲು ಸಾಧ್ಯವಿಲ್ಲ ಎಂದರು.
ಸಾವಯವ ಕೃಷಿಗಾಗಿ ಸಂಪನ್ಮೂಲ ವ್ಯಕ್ತಿಗಳನ್ನು ಹೆಚ್ಚಿಸಬೇಕು. ಮಾದರಿ ಸಂಪನ್ಮೂಲ ವ್ಯಕ್ತಿಗಳು ಕೃಷಿಕರಿಗೆ ಸಾವಯವ ಕುರಿತು ಇನ್ನಷ್ಟು ಮಾಹಿತಿ ನೀಡಬೇಕು. ಸಾವಯವ ಗೊಬ್ಬರವನ್ನು ಸರ್ಕಾರದ ಸಂಸ್ಥೆಗಳೇ ಪ್ರಮಾಣಿಕರಿಸುವಂತಾಗಬೇಕು. ಗುಣಮಟ್ಟದ ಪ್ರಮಾಣೀಕೃತ ಸಾವಯವ ಗೊಬ್ಬರ ತಯಾರಿಕೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷ ಆನಂದ್ ಉಪ್ಪಳ್ಳಿ,ಕೃಷಿ ನಿರ್ದೇಶಕ ಶ್ರೀನಿವಾಸ್,ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವರಾಜ್ ಸೇರಿದಂತೆ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.



