ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುರಿದು ಬಿದ್ದಿದೆ. ಮೂರು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆಗಿನ ಜೆಡಿಎಸ್ ಮೈತ್ರಿ ಕಡಿತವಾಗಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಪದೇ ಪದೇ ನಮ್ಮ ಪಕ್ಷವನ್ನು ಕೆಣಕುವ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಎಂಬುದು ಈಗ ಎಲ್ಲಿದೆ? ಜೆಡಿಎಸ್ ಒಂದು ಪಕ್ಷವೇ ಅಲ್ಲ ಎಂದೆಲ್ಲ ಹೇಳುತ್ತಿದ್ದಾರೆ. ಹಾಗಾಗಿ ಜೆಡಿಎಸ್ ಶಕ್ತಿಯನ್ನು ತೋರಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಈ ಮೂಲಕ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದರು.
ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್ ಗೂ ನನ್ನ ಜೊತೆ ಮಾತನಾಡಲು ಬಿಡುತ್ತಿಲ್ಲ. ನನ್ನೊಂದಿಗೆ ಮಾತನಾಡದಂತೆ ಒತ್ತಡ ಹೇರುತ್ತಿದ್ದಾರೆ. ನಾವು ಇಲ್ಲಿ ಯಾರಿಗೂ ಸವಾಲು ಹಾಕಲು ಬಂದಿಲ್ಲ. ಕಿಂಗ್ ಮೇಕರ್ ಆಗಲೂ ಬಯಸುತ್ತಿಲ್ಲ. ನಮ್ಮದೇನಿದ್ದರೂ 2023ರ ಚುನಾವಣೆ ಮೇಲೆ ಗುರಿ ಎಂದು ಹೇಳಿದರು.
ಇನ್ನು ಬಿಜೆಪಿಯಿಂದಲೂ ನಾವು ಅಂತರ ಕಾಯ್ದುಕೊಳ್ಳುತ್ತಿದ್ದೇವೆ. ರಾಜ್ಯವನ್ನು ಬಿಜೆಪಿ ಲಘುವಾಗಿ ಪರಿಗಣಿಸುತ್ತಿದೆ. ಅಧಿಕಾರ ಸಿಗದಿದ್ದರೂ ತೊಂದರೆಯಿಲ್ಲ. ಅಂತರ ಕಾಯ್ದುಕೊಳ್ಳುವುದು ಮುಖ್ಯ ಎಂದರು.
ಒಟ್ಟು 73 ಪಾಲಿಕೆ ಸದಸ್ಯರಿದ್ದು, ಇದರಲ್ಲಿ ಬಿಜೆಪಿ 25 ಸ್ಥಾನ, ಕಾಂಗ್ರೆಸ್ 20 ಹಾಗೂ ಜೆಡಿಎಸ್ 22 ಸ್ಥಾನ ಗೆದ್ದಿದೆ. ಮೈಸೂರು ಪಾಲಿಕೆ ಅಧಿಕಾರ ಹಿಡಿಯಲು ಮ್ಯಾಜಿಕ್ ನಂಬರ್ 37 ಆಗಿದೆ. ಒಟ್ನಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು ಮೇಯರ್ ಇನ್ನಷ್ಟೇ ತಿಳಿಯಬೇಕಿದೆ.



