ಬೆಂಗಳೂರು: ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ನಡೆದ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಪಂಚಮಸಾಲಿ ಸಮುದಾಯ ಪ್ರವರ್ಗ 2 ಎ ಮೀಸಲಾತಿ, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ. ವಾಲ್ಮೀಕಿ ಸಮುದಾಯ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಡ ಹಾಕಿದೆ. ಇನ್ನೂ ಹಲವು ಸಮುದಾಯಗಳು ಬೇಡಿಕೆ ಇಟ್ಟಿರುವುದನ್ನು ಪರಿಶೀಲಿಸಿ ಸಮಿತಿ ವರದಿ ನೀಡಲಿದೆ ಎಂದು ಹೇಳಿದರು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಮಿತಿಯ ನೇತೃತ್ವ ವಹಿಸಲಿದ್ದಾರೆ.ಓರ್ವ ನಿವೃತ್ತ ಅಧಿಕಾರಿ ಮತ್ತು ಸಮಾಜ ವಿಜ್ಞಾನಿ ಸಮಿತಿ ಸದಸ್ಯರಾಗಿರುತ್ತಾರೆ ಎಂದು ವಿವರಿಸಿದರು.ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯ ಅಧಿಕಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡುವ ತೀರ್ಮಾನವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಬೊಮ್ಮಾಯಿ ಹೇಳಿದರು.
ಪ್ರಸ್ತುತ ಇರುವ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದರೆ ಮೀಸಲಾತಿ ಪ್ರಮಾಣ ಶೇ. 50 ಮೀರುತ್ತದೆ.ಆದರೆ ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ಶೇ.50 ಮೀಸಲಾತಿ ಮೀರುವಂತಿಲ್ಲ. ಈ ಬಗ್ಗೆಯೂ ಸಮಿತಿ ಪರಿಶೀಲಿಸಿ ಸಮಿತಿ ವರದಿ ನೀಡಲಿದೆ ಎಂದು ತಿಳಿಸಿದರು.



