ಬೆಂಗಳೂರು: ವಿಧಾನಸಭೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಸದಸ್ಯರು ಸದನದಲ್ಲಿ ಸಿಡಿ ಪ್ರದರ್ಶಿಸಿ ಪ್ರತಿಭಟಿಸಿದರು. ಸುಗಮ ಕಲಾಪಕ್ಕೆ ಸ್ಪೀಕರ್ ಪ್ರತಿ ಪಕ್ಷಗಳ ಜೊತೆ ಸಂಧಾನ ಸಭೆ ನಡೆಸಿದರೂ ಕಾಂಗ್ರೆಸ್ ಸದಸ್ಯರು ಧರಣಿ ವಾಪಸ್ ಪಡೆಯದೇ ಧರಣಿ ಮುಂದುವರೆಸಿದ್ದಾರೆ .
ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸಿಡಿ ಪ್ರದರ್ಶಿಸಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಪ್ರಕರಣದ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ನಡುವೆ ವಿಪಕ್ಷ ಸದಸ್ಯರು ಪ್ರಶ್ನೋತ್ತರ ಕಲಾಪಕ್ಕೆ ಅವಕಾಶ ನೀಡಬೇಕು. ಈ ರೀತಿ ಸಿಡಿ ಹಿಡಿದು ಪ್ರತಿಭಟಿಸುವುದು ಸತ್ ಸಂಪ್ರದಾಯವಲ್ಲ. ಪ್ರಶ್ನೋತ್ತರ ಕಲಾಪದ ಬಳಿಕ ಚರ್ಚೆಗೆ ಅವಕಾಶ ನಿಡುವುದಾಗಿ ಸ್ಪೀಕರ್ ಕಾಗೇರಿ ಹೇಳಿದರು. ಸ್ಪೀಕರ್ ಮನವಿಗೂ ಬಗ್ಗದ ಕಾಂಗ್ರೆಸ್ ಸದಸ್ಯರು ಧರಣಿ ಮುಂದುವರೆಸಿ, ಸಿಡಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸದನದಲ್ಲಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಪೀಕರ್ ಕಾಗೇರಿ, ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿ ವಿಪಕ್ಷ ನಾಯಕರ ಜೊತೆ ಮಾತುಕತೆ ನಡೆಸಿದರು. ಮತ್ತೆ ಕಲಾಪ ಆರಂಭವಾದಗಲೂ ಧರಣಿ ಮುಂದುವರಿಸಿದರು. ಹೀಗಾಗಿ ಸ್ಫೀಕರ್ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.