ಮಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ಸಿಎಂ ಯಡಿಯೂರಪ್ಪ ವಿರುದ್ಧ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿದ್ದು, ಈ ಬಗ್ಗೆ ಇಂದು ಸಂಜೆಯೊಳಗೆ ಈಶ್ವರಪ್ಪ ಸಚಿವ ಸ್ಥಾನದಿಂದ ಉಚ್ಛಾಟಿಸಲಿ. ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಈಶ್ವರಪ್ಪ ಬರೆದಿರುವುದು ಅದೊಂದು ಪತ್ರ ಅಲ್ಲ, ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಈಶ್ವರಪ್ಪ ಸಾಂವಿಧಾನಿಕ ಮುಖ್ಯಸ್ಥ ರಾಜ್ಯಪಾಲರಿಗೆ ಪತ್ರ ಬರೆದು ಸಿಎಂ ಮೇಲೆ ವಿಶ್ವಾಸ ಇಲ್ಲ ಹೇಳಿಕೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದು ಬಿದ್ದಿದ್ದು, ಸಚಿವರಿಗೆ ಸಿಎಂ ಮೇಲೆ ವಿಶ್ವಾಸ ಇಲ್ಲದಾಗಿದೆ ಎಂದರು.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಇವತ್ತು ಸಾಯಾಂಕಾಲದ ಒಳಗೆ ಈಶ್ವರಪ್ಪ ಅವರನ್ನು ಉಚ್ಛಾಟಿಸಲಿ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಭಿನ್ನಮತವಿದೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಈಗ ಅವರು ಆಡಳಿತದಲ್ಲಿದ್ದಾರೆ. ನಾನು ಮಂತ್ರಿಯಾದಾಗ ಸಿಎಂ ವಿರುದ್ಧ ಮಾತನಾಡಿಲ್ಲ. ಮೊದಲು ನಿಮ್ಮದನ್ನು ಸರಿ ಮಾಡಿಕೊಳ್ಳಿ ಎಂದರು.
ಸರ್ಕಾರ ಕೋವಿಡ್ ನಿಯಮಾವಳಿ ಮಾಡಿದ ರೀತಿ ಸರಿ ಇಲ್ಲ. ಅದು ಸಂಪೂರ್ಣ ವಿಫಲವಾಗಿದೆ. ಕೊರೊನಾ ನಿಯಂತ್ರಣಕ್ಕೆ ಬರಬೇಕು. ಚುನಾವಣಾ ಪ್ರಚಾರ ಸೇರಿದಂತೆ ಎಲ್ಲದನ್ನೂ ನಿಯಂತ್ರಣ ಮಾಡಿ ಎಂದರು.



