ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್.ಎಂ ಕವಟಗಿ ಮಠ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ, ಜಗದೀಶ್.ಎಂ ಕವಟಗಿ ಮಠ ಮಾತ್ರ ಸ್ಪರ್ಧಿಸಿದ್ದರಿಂದ ಚುನಾವಣಾಧಿಕಾರಿ ಮನೋಜ್ಚಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು.
ನಂತರ ಮಾತನಾಡಿದ ನೂತನ ಅಧ್ಯಕ್ಷ ಜಿ.ಟಿ.ದೇವೇಗೌಡ, ರಾಜ್ಯದಲ್ಲಿರುವ ಸಹಕಾರಿ ಸಂಘಗಳ ಸ್ಥಿತಿಗತಿಗಳ ಬಗ್ಗೆ ಸರ್ವೆ ಮಾಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಕೋವಿಡ್ ನಂತರ ಸಹಕಾರ ಸಂಘಗಳು ಯಾವ ಹಂತದಲ್ಲಿವೆ ಎಂಬುದನ್ನು ಸರ್ವೆ ಮಾಡಿಸಲಾಗುವುದು. ಇದರಿಂದ ಸಂಘಗಳ ಸ್ಥಿತಿಗತಿ ಗೊತ್ತಾಗಲಿದೆ ಎಂದರು.
ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳು. ನಾನು ಎಲ್ಲರಿಗಾಗಿ ಎಲ್ಲರೂ ನನಗಾಗಿ ಎಂಬುದೇ ಸಹಕಾರಿ ಕ್ಷೇತ್ರದ ಮೂಲ ಮಂತ್ರವಾಗಿದ್ದು, ಪ್ರತಿ ಹಳ್ಳಿಗೂ ಸಹಕಾರ ಕ್ಷೇತ್ರವನ್ನು ತಲುಪಿಸುವ ಕೆಲಸ ಮಾಡಲಾಗುವುದು ಎಂದರು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಜಿ.ಟಿ.ದೇವೇಗೌಡ ಅವರು ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಅವರಿಗೆ ಒಳ್ಳೆಯ ಆಡಳಿತ ಅನುಭವವಿದೆ. ಮುಂದಿನ 5 ವರ್ಷದಲ್ಲಿ ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಲಿದ್ದಾರೆ ಎಂದರು.
ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಾಜಿ ಸಚಿವ ಎಚ್.ಕೆ.ಪಾಟೀಲ್, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಉಪಾಧ್ಯಕ್ಷ ಜಿ.ಡಿ.ಹರೀಶ್ ಗೌಡ, ಸಹಕಾರ ಮಾರುಕಟ್ಟೆ ಮಹಾಮಂಡಳದ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರ ಮಹಮಂಡಳದ ಅಧ್ಯಕ್ಷೆ ಲಲಿತಾ ಜಿ.ಟಿ.ದೇವೇಗೌಡ, ಸಹಕಾರ ಮಹಿಳಾ ಮಂಡಳದ ಅಧ್ಯಕ್ಷೆ ಶಕುಂತಲಾ ಬೆಲದಾಳೆ ಮತ್ತಿತರರು ಅಭಿನಂದಿಸಿದರು.



