ಬೆಂಗಳೂರು: ಖ್ಯಾತ ಚುಟುಕು ಕವಿಗಳು, ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಜರಗನಹಳ್ಳಿ ಶಿವಶಂಕರ್ ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಕೋವಿಡ್ ಪೀಡಿತರಾಗಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮರಣ ಹೊಂದಿದ್ದಾರೆ. 1949 ರಲ್ಲಿ ಜರಗನಹಳ್ಳಿ ಯಲ್ಲಿ ಜನಿಸಿದ ಅವರು, ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿದ್ದರು. ಬ್ಯಾಂಕ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅವರು, ಸ್ವಯಂ ನಿವೃತ್ತಿ ಪಡೆದ ಬಳಿಕವೂ ಸಾಹಿತ್ಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು.
ಸಾವಿರಕ್ಕೂ ಹೆಚ್ಚು ಹನಿಗವನಗಳನ್ನು ಬರೆದು ಪ್ರಕಟಿಸಿದ್ದಾರೆ. ” ಮಳೆ “, “ಆಲಿಕಲ್ಲು”, “ದೇವರ ನೆರಳು” ಮೊದಲಾದ ಕವನ ಸಂಕಲಗಳು ಅವರ ಸಾಹಿತ್ಯ ಕೃಷಿಯ ಮಜಲುಗಳು. ಇವರ ಹನಿಗವನಗಳ ಸಂಕಲನ ‘ಝರಿ’ ಉರ್ದು, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಗುಜರಾತಿ ಭಾಷೆಗಳಿಗೂ ಅನುವಾದಗೊಂಡಿವೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ದಿನಕರ ದೇಸಾಯಿ ಸಾಹಿತ್ಯ ಪ್ರಶಸ್ತಿ, ಸುವರ್ಣ ಕರ್ನಾಟಕ ಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪಡೆದಿದ್ದರು.



