ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 6ರವರೆಗೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಿದ್ದು, ಚಂಡಮಾರುತದ ಪ್ರಭಾವದಿಂದ ಮಳೆಯಾಗುತ್ತಿದೆ. ಅಕ್ಟೋಬರ್ 5 ಮತ್ತು 6ರಂದು ಮಳೆ ಹೆಚ್ಚಾಗಲಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ನಿನ್ನೆ ಸಂಜೆ (ಅ. 03) ಸುರಿದ ಭಾರಿ ಮಳೆ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೊಡಗಿನಲ್ಲಿ ಮಂಗಳವಾರ ಹಾಗೂ ಬುಧವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವುದಾಗಿ ಮುನ್ಸೂಚನೆ ನೀಡಲಾಗಿದೆ.



