ದಾವಣಗೆರೆ: ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಜ.26 ರಿಂದ ಜನರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ವಿಧಾನಸೌಧದಲ್ಲಿ ಇರುವುದಲ್ಲ, ಎಲ್ಲ ಸೌಲಭ್ಯಗಳನ್ನು ಜನರ ತಲುಪಿಸುವುದು ಮುಖ್ಯ. ಹೀಗಾಗಿ ಮುಂದಿನ ಜನವರಿ 26ರಿಂದ ಜಾರಿಗೆ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಿವ ಯೋಜನೆಗೆ ಚಾಲನೆ ನೀಡಲಿದ್ದೇವೆ ಎಂದರು.
ನಿಮ್ಮ ರೇಷನ್, ಸಾಮಾಜಿಕ ಭದ್ರತೆ ಸೇರಿದಂತೆ ಎಲ್ಲ ಸರ್ಟಿಫಿಕೆಟ್ಗಳು ಗ್ರಾಮ ಪಂಚಾಯ್ತಿಯಲ್ಲಿಯೇ ಸಿಗಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ ಮೊದಲು ಪ್ರಾಯೋಗಿಕವಾಗಿ ನವೆಂಬರ್ 1ರಂದು ಜನಸೇವಕ ಕಾರ್ಯಕ್ರಮಗಳನ್ನು ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮಾಡಲಾಗುವುದು. ಬಳಿಕ ಜ.26ರಿಂದ ರಾಜ್ಯಕ್ಕೆ ವಿಸ್ತರಣೆ ಮಾಡುವ ಗುರಿ ಹೊಂದಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಕಂದಾಯ ಸಚಿವ ಆರ್. ಅಶೋಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ‘ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಪ್ರೊ.ಎನ್.ಲಿಂಗಣ್ಣ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್, ಮಾಜಿ ಶಾಸಕ ಬಸವರಾಜ ನಾಯ್ಕ್, ಮೇಯರ್ ಎಸ್.ಟಿ. ವೀರೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ, ಸುಮಾ ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಸೇರಿದಂತೆ ಮತ್ತಿತರು ಭಾಗಿಯಾಗಿದ್ದರು.



