ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ನಾಯಕರ ಕಲೆಕ್ಷನ್ ಗಿರಾಕಿ ಎಂಬ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ 13 ರಾಜಕಾರಣಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ACB) ದೂರ ದಾಖಲಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಬಗ್ಗೆ ಕಾಂಗ್ರೆಸ್ ನಾಯಕರಾದ ವಿ.ಎಸ್. ಉಗ್ರಪ್ಪ, ಸಲೀಂ ನಡುವೆ ನಡೆದ ‘ಕಲೆಕ್ಷನ್ ಗಿರಾಕಿ’ ಸಂಭಾಷಣೆ ಆಧಾರವಾಗಿಟ್ಟುಕೊಂಡು ಎಸಿಬಿಗೆ ದೂರು ನೀಡಲಾಗಿದೆ. ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಗೊತ್ತಿದೆ. ನೀರಾವರಿ ಹಾಗೂ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಇದೀಗ 8ರಿಂದ 12 ಪರ್ಸೆಂಟ್ ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದ ಬಗ್ಗೆ ಗೊತ್ತಿದ್ದರೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿರುವ ರಾಹುಲ್ ಗಾಂಧಿ ವಿರುದ್ಧವೂ ದೂರು ನೀಡಲಾಗಿದೆ.
ಇನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ನೀರಾವರಿ ಇಲಾಖೆಯಲ್ಲಿ ಲಂಚ ಪಡೆದು ಗುತ್ತಿಗೆದಾರರಿಗೆ ಸಾವಿರಾರು ಕೋಟಿ ಬಿಡುಗಡೆ ಮಾಡಿರುವ ಆರೋಪವಿದ್ದು, ಇತ್ತೀಚೆ ಅವರ ಆಪ್ತರ ಮನೆ ಮೇಲೆ ನಡೆದ ಐಟಿ ದಾಳಿ ಹಿನ್ನೆಲೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಎಸಿಬಿಗೆ ಆಲಂ ಪಾಷಾ ದೂರು ದಾಖಲಿಸಿದ್ದಾರೆ.



