ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ (ದೂಢಾ) 2017ರಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ದೂಢಾ ಕಚೇರಿ ಮುಂದೆ ಶ್ರೀರಾಮ ಸೇನಾ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಮಣಿಸರ್ಕಾರ್ ಮಾತನಾಡಿ, ದೂಢ 2017 ರಲ್ಲಿ ಕಾನೂನು ಬಾಹಿರವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ರಾಜಕೀಯ ಪಕ್ಷದ ನಾಯಕರು, ಸರ್ಕಾರಿ ನೌಕರರು ಸುಳ್ಳು ಮಾಹಿತಿ ನೀಡಿ ನಿವೇಶನಗಳನ್ನು ಪಡೆದುಕೊಂಡಿದ್ದಾರೆ. ಇಲ್ಲಿ ಅಧಿಕಾರ ದುರುಪಯೋಗ ನಡೆದಿದೆ ಎಂದು ದೂರಿದರು.
ಈಗಿನ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ ಮತ್ತು ಅವರ ಸಹೋದರರು ಹಾಗೂ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಅವರ ಸಹೋದರು ಹಾಗೂ ಸಚಿವರು ಮತ್ತು ಶಾಸಕರು ಹಾಗೂ ಜಿಲ್ಲಾಧಿಕಾರಿಗಳು, ಆಯುಕ್ತರು , ಅಧಿಕಾರಿಗಳು ದೂಢಾ ಸದಸ್ಯರು ಸೇರಿಕೊಂಡು ಭ್ರಷ್ಟಾಚಾರ ಎಸಗಿದ್ಧಾರೆ ಎಂದು ಆರೋಪಿಸಿದರು.
ಈ ಬಗ್ಗೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸುದ್ದಿಘೋಷ್ಟಿ ನಡೆಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಮನವಿ ಮಾಡಿದ್ದರು. ಸರ್ಕಾರ ಈವರೆಗೆ ಕಾನೂನು ಕ್ರಮ ತೆಗೆದುಕೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಿ, ತಪ್ಪಿಸ್ಥರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅವರಿಗೆ ದೂಢಾ ಆಯುಕ್ತರ ಮೂಲಕ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀರಾಮ ಸೇನಾ ನಗರ ಅಧ್ಯಕ್ಷ ಬಿ.ಜಿ. ರಾಹುಲ್, ಜಿಲ್ಲಾ ಉಪಾಧ್ಯಕ್ಷ ಆಲೂರು ರಾಜಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರ್, ನಗರ ಉಪಾಧ್ಯಕ್ಷ ರಾಜು, ಶಿಬಾರ್ ರಮೇಶ್, ಶ್ರೀಧರ್, ವಿನೋದ ವರ್ಣೇಕರ್, ಕರಾಟೆ ರಮೇಶ್, ಡಿ.ಬಿ. ವಿನೋದ ರಾಜ್, ಸುನೀಲ್ ವಾಲಿ, ಮಹೇಶ್, ರಘು, ಮಾರ್ಕಂಡೇಯ ಸೇರಿದಂತೆ ಇತರಿದ್ದರು.



