ದಾವಣಗೆರೆ:ನಗರದಲ್ಲಿ ಪೌರಕಾರ್ಮಿಕರಾಗಿ 380 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದ್ದು, ಜನವರಿ ಅಂತ್ಯದ ವೇಳೆಗೆ ಅಥವಾ ಫೆಬ್ರವರಿ ಮೊದಲ ವಾರದೊಳಗೆ ಉದ್ಘಾಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮ್ಯಾನುಯಲ್ ಸ್ಕ್ಯಾವೆಂಜರ್ಸ್, ಅಥವಾ ಅವರ ಅವಲಂಬಿತರಲ್ಲಿ ಯಾರಾದರೂ ಡ್ರೈವಿಂಗ್ ಲೈಸೆನ್ಸ್ ಹೊಂದಿದ್ದರೆ, ಅಂತಹವರಿಗೆ ಕಸ ವಿಲೇವಾರಿಯ ಆಟೋ ಟಿಪ್ಪರ್ ಚಾಲನೆಗೆ ನೇಮಿಸಿಕೊಳ್ಳುವಂತೆ, ಸುಲಭ ಶೌಚಾಲಯಗಳ ನಿರ್ವಹಣೆ ಹೊಣೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಶ್ರಯ ಸಮಿತಿಯಡಿ ನೀಡಲಾಗುವ ನಿವೇಶನ ಹಂಚಿಕೆ ಸಂದರ್ಭದಲ್ಲಿ ಪೌರಕಾರ್ಮಿಕರಿಗೂ ಇಂತಿಷ್ಟು ನಿವೇಶನಗಳನ್ನು ಮೀಸಲಿರಿಸಲು ಕೋರಿ, ಸಮಿತಿಯ ಅಧ್ಯಕ್ಷರಾಗಿರುವ ಆಯಾ ಶಾಸಕರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪೌರ ಕಾರ್ಮಿಕರಿಗೆ ತಪ್ಪದೆ ಬೆಳಗಿನ ಉಪಹಾರ ನೀಡುವುದು, ಗ್ಲೌಸ್, ಶೂ ಮುಂತಾದ ಸುರಕ್ಷತಾ ಸಾಧನ ಬಳಸುವುದನ್ನು ಕಡ್ಡಾಯಗೊಳಿಸಲು ಕೂಡ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಹೇಳಿದರು.
ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕದಲ್ಲಿ ರೋಸ್ಟರ್ ಪಾಲನೆ ಕುರಿತಂತೆ ಸಮಸ್ಯೆ ಇದೆ. ಶೀಘ್ರದಲ್ಲಿಯೇ ಸಮಾಜ ಕಲ್ಯಾಣ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆ ಇತ್ಯರ್ಥಕ್ಕೆ ಯತ್ನಿಸಲಾಗುವುದು. ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಜರುಗಿದ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಬಂಧಪಟ್ಟ ಅಧಿಕಾರಿಗಳು ದೂರು ದಾಖಲಿಸಿ ತನಿಖೆ ನಡೆಸಿದ್ದಾರೆ. ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಿದ್ದು, ತಪ್ಪಿತಸ್ಥರು ಯಾರೇ ಆಗಿದ್ದರೂ, ಅವರ ವಿರುದ್ಧ ಶೀಘ್ರ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಿವಣ್ಣ ಹೇಳಿದರು.



