ಡಿವಿಜಿ ಸುದ್ದಿ, ಹಿರೇಕೆರೂರು: ಜೆಡಿಎಸ್ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದಿದ್ದ ಕಬ್ಬಿಣಕಂಥಿ ಮಠದ ಸ್ವಾಮೀಜಿ ಇದೀಗ ನಾಮಪತ್ರ ವಾಪಸ್ ಪಡೆದಿದ್ದು, ಇದರಿಂದ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಸಂಸದ ಬಿ.ವೈ. ರಾಘವೇಂದ್ರ, ಪಂಚ ಮಠಗಳ ಶ್ರೀಗಳ ನೇತೃತ್ವದಲ್ಲಿ ಮನವೊಲಿಕೆಯಿಂದ ಶಿವಲಿಂಗ ಶಿವಾಚಾರ್ಯ ಶ್ರೀಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಮಾಲೆ ಹಾಕುವ ಮೂಲಕ ರಾಘವೇಂದ್ರ ಅವರು ಸ್ವಾಮೀಜಿ ಅವರನ್ನು ಸ್ವಾಗತಿಸಿದ್ದಾರೆ.
ಹಿರಿಯ ಮಠಾಧೀಶರ ಆದೇಶದಿಂದ ನಿರ್ಧಾರ ಬದಲಿಸಿದ್ದೇನೆ. ಯಾರೇ ಜನಪ್ರತಿನಿಧಿ ಆಯ್ಕೆಯಾಗಿ ಬಂದರೂ ತಾಲೂಕಿನ ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಕ್ಕೆ ತರುವ ಅಜೆಂಡಾಗೆ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ವಾಪಸ್ ಪಡೆಯುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.
ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗೆ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಿದ್ದರು. ರಾತ್ರೋರಾತ್ರಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರು. ಜೆಡಿಎಸ್ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ನಾಮಪತ್ರ ಸಹ ಸಲ್ಲಿಸಿದ್ದರು.
ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ವೀರಶೈವ ಲಿಂಗಾಯತರ ಮತ ಒಡೆಯಲು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಈ ರಣತಂತ್ರ ರೂಪಿಸಿದ್ದಾರೆ ಎಂದು ಭಕ್ತರು ಸ್ವಾಮೀಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದರು.



