ಭದ್ರಾವತಿ: ಭದ್ರಾವತಿಯ ಸಾಮಿಲ್ ಒಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಿನ್ನೆ ರಾತ್ರಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಸಿಬ್ಬಂಧಿ ಸತತ 8 ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಭಾರೀ ಪ್ರಮಾಣದ ಬೆಂಕಿಗೆ ಸಾಮಿಲ್ ನಲ್ಲಿದ ನಾಟ ಸೇರಿದಂತೆ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿ ಸಂಭವಿಸಿದೆ.
ನಗರದ ಬಸ್ ನಿಲ್ದಾಣ ಸಮೀಪದಲ್ಲಿರುವ ಮಂಜುನಾಥ ಸಾಮಿಲ್ನಲ್ಲಿ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಸಾಮಿಲ್ ನಲ್ಲಿದ್ದ ಕಟ್ಟಿಗಳಿಗೆ ಬೆಂಕಿ ಹತ್ತಿಕೊಂಡಿದ್ದರಿಂದ ತೀವ್ರ ಸ್ವರೂಪದಲ್ಲಿ ವ್ಯಾಪಿಸಿತ್ತು. ಸತತ 8 ಗಂಟೆ 9 ಅಗ್ನಿಶಾಮಕಗಳ ಮೂಲಕ ಬೆಂಕಿ ನಂದಿಸಿದ್ದಾರೆ.
ಮಂಜುನಾಥ ಸಾಮಿಲ್ನಲ್ಲಿ ಭಾರೀ ಪ್ರಮಾಣದ ನಾಟ ಸಂಗ್ರಹಿಸಲಾಗಿತ್ತು. ಬೆಂಕಿಯ ತೀವ್ರತೆಗೆ ನಾಟ ಭಸ್ಮವಾಗುತ್ತಲೇ ಹೋದವು. ಅಗ್ನಿಶಾಮಕ ಸಿಬ್ಬಂದಿ ಒಂದೆಡೆ ಬೆಂಕಿ ನಂದಿಸುವಷ್ಟರಲ್ಲಿ ಮತ್ತೊಂದು ಕಡೆಗೆ ಬೆಂಕಿ ವ್ಯಾಪಿಸುತ್ತಿತ್ತು. ಹಾಗಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿ ಕಷ್ಟಪಡಬೇಕಾಯಿತು.



