ಹುಬ್ಬಳ್ಳಿ: ರೈತರು ಮತ್ತು ಬಡಜನರಿಗೆ ಅನುಕೂಳವಾಗಿದ್ದ ಆರೋಗ್ಯ ವಿಮೆ ‘ಯಶಸ್ವಿನಿ ಯೋಜನೆ’ ಏಪ್ರಿಲ್ 1 ರಿಂದ ಮತ್ತೆ ಆರಂಭವಾಗಲಿದೆ. ಐದು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆಗೆ ಮತ್ತೆ ಚಾಲನೆ ಸಿಗಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯಶಸ್ವಿನಿ ಯೋಜನೆಗೆ ಏಪ್ರಿಲ್ 1 ರಂದು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಾಲು ಉತ್ಪಾದಕರ ಅನುಕೂಲಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಸ್ಥಾಪನೆ ಮಾಡಲಾದ ಕ್ಷೀರ ಸಮೃದ್ಧಿ ಬ್ಯಾಂಕ್ ಲೋಗೋ ಸಹ ಅಂದೇ ಬಿಡುಗಡೆ ಮಾಡಲಿದ್ದಾರೆ.
ಏ. 1 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಜನಪ್ರಿಯ ಯಶಸ್ವಿನಿ ಆರೋಗ್ಯ ವಿಮೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆಯಿಂದ ರೈತರ ಆದಾಯ ಹೆಚ್ಚಳದ ಜೊತೆಗೆ ಹೈನುಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿ ಆಗಲಿದೆ ಎಂದು ತಿಳಿಸಿದ್ದಾರೆ.



