ದಾವಣಗೆರೆ: ಕೇಂದ್ರ ಸರ್ಕಾರ ಕಾರ್ಮಿಕ-ರೈತ ವಿರೋಧಿ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಭಾಗವಹಿಸಿ ಪ್ರತಿಭಟನೆ ನಡೆದಿದರು.
ನಗರದ ಜಯದೇವ ವೃತ್ತದಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಯದೇವ ವೃತ್ತದಿಂದ ಶಿವಪಯ್ಯ ವೃತ್ತಕ್ಕೆ ತೆರಳುವ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಕಿಡಿಕಾರಿದರು.
ಜೆಸಿಟಿಯು ಮುಖಂಡ ಆವರಗೆರೆ ಉಮೇಶ್, ಎಲ್ಲಾ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಖಾತ್ರಿ ಪಡಿಸಬೇಕು. ವಿದ್ಯುತ್ ಚ್ಛಕ್ತಿ ಮಸೂದೆ ಹಿಂಪಡೆಯಬೇಕು. ಸಾರ್ವಜನಿಕ ಉದ್ಯಮಗಳ ಖಾಸಗಿಕರಣ ತಡೆಯಬೇಕು. ಎನ್ಎಂಪಿ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.
ಎಐಟಿಯುಸಿ ಮುಖಂಡ ರಾಘವೇಂದ್ರ ನಾಯರಿ ಮಾತನಾಡಿ, ಆದಾಯ ತೆರಿಗೆ ಪಾವತಿಸದ ಕುಟುಂಬಗಳಿಗೆ ಮಾಸಿಕ 7500 ರೂ.ಗಳ ಆಹಾರ ಮತ್ತು ಆದಾಯ ಬೆಂಬಲ ನೀಡಬೇಕು. ನರೇಗಾಕ್ಕೆ ಹೆಚ್ಚಿನ ನಿಧಿ ನೀಡಿ ಉದ್ಯೋಗ ಖಾತ್ರಿ ಯೋಜನೆಯನ್ನು ನಗರಗಳಿಗೂ ವಿಸ್ತರಿಸಬೇಕು. ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. ಕಟ್ಟಡ ಕಾರ್ಮಿಕ ಮಂಡಳಿಯ ಅಕ್ರಮಗಳನ್ನು ತಡೆಗಟ್ಟಿ ಬೋಗಸ್ ಕಾರ್ಡ್ಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಆನಂದರಾಜ್, ಮಂಜುನಾಥ ಕೈದಾಳೆ, ಆವರೆಗೆರ ಚಂದ್ರು, ಜಬಿನಾ ಖಾನಂ, ಯರಗುಂಟೆ ಸುರೇಶ್, ತಿಪ್ಪೇಸ್ವಾಮಿ, ಶ್ರೀನಿವಾಸ, ಪರಶುರಾಮ್, ಆವರಗೆರೆ ವಾಸು, ಐರಣಿ ಚಂದ್ರು ಸೇರಿದಂತೆ ಹಲವರು ಭಾಗವಹಿಸಿದ್ದರು.



