ನವದೆಹಲಿ: ಐಎನ್ಎಕ್ಸ್ ಮೀಡಿಯಾ ಅವ್ಯವಹಾರ0 ಪ್ರಕರಣಕ್ಕೆ ಸಂಬಂಧ ಜೈಲು ಸೇರಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂಗೆ ಸುಪ್ರೀಂ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ
ನ್ಯಾ. ಆರ್. ಭಾನುಮತಿ ನೇತೃತ್ವದ ತ್ರಿ ಸದಸ್ಯ ಪೀಠ ಚಿದಂಬರಂ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 105 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದ ಚಿದಂಬರಿಗೆ ಬಿಡುಗಡೆಯ ಭಾಗ್ಯ ದೊರೆತಿದೆ. 2 ಲಕ್ಷ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಪಡೆಯಲಾಗಿದೆ. ಅನುಮತಿಯಿಲ್ಲದೆ ದೇಶ ಬಿಡುವಂತಿಲ್ಲ ಎಂದು ಷರತ್ತು ವಿಧಿಸಿದೆ.
ಪ್ರಕರಣದ ಹಿನ್ನೆಲೆಯಲ್ಲಿ ಸಾರ್ವಜನಿಕ ಹೇಳಿಕೆ ಹಾಗೂ ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು ಎಂದು ಕೋರ್ಟ್ ಸೂಚಿಸಿದೆ. ಈ ಹಿಂದೆ ನ. 15ರಂದು ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿ ದೆಹಲಿ ಹೈಕೋರ್ಟ್, ಜಾಮೀನು ನಿರಾಕರಿಸಿತ್ತು.ಈ ಪ್ರಕರಣದಲ್ಲಿ ಚಿದಂಬರಂ ಅವರದ್ದು ಪ್ರಮುಖ ಪಾತ್ರವಿದ್ದು, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಆದರೆ ಇಂದು ಚಿದಂಬರಂ ಜಾಮೀನು ಅರ್ಜಿಯ ಅಂತಿಮ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ಚಿದಂಬರಂಗೆ ಜೈಲು ವಾಸದಿಂದ ಮುಕ್ತಿ ದೊರೆತಿದೆ.



